ಬೆಂಗಳೂರು: ‘ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಲಿದೆ ಎಂಬ ಗುಪ್ತದಳದ ವರದಿಯೇ ಪ್ರಧಾನಿ ನರೇಂದ್ರ ಮೋದಿ ಕೃಷಿ ಸಂಬಂಧಿ ಮೂರು ಕಾಯ್ದೆಗಳನ್ನು ಹಿಂಪಡೆಯುವ ನಿರ್ಧಾರ ಪ್ರಕಟಿಸಲು ಕಾರಣ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರಧಾನಿ ತೀರ್ಮಾನದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ‘ಹಲವು ರಾಜ್ಯಗಳಲ್ಲಿ ಚುನಾವಣೆಯ ಅಗ್ನಿಪರೀಕ್ಷೆ ಎದುರಾಗುತ್ತಿದೆ. ಈ ಸಂದರ್ಭದಲ್ಲಿ ಹಿನ್ನಡೆಯಾಗಬಹುದು ಎಂಬ ವರದಿಗಳು ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ತಲುಪಿವೆ. ಚುನಾವಣೆಗಳು ಮುಗಿಯುವವರೆಗೆ ತಾತ್ಕಾಲಿಕವಾಗಿ ಕಾಯ್ದೆಗಳನ್ನು ಹಿಂಪಡೆದಿದ್ದಾರೆ’ ಎಂದು ತಿಳಿಸಿದ್ದಾರೆ.
ತಾವು ತಂದಿದ್ದ ಕಾಯ್ದೆಗಳನ್ನು ಜರಿಗೆ ಅರ್ಥ ಮಾಡಿಸಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ಹೇಳಿದ್ದಾರೆ. ಕೆಟ್ಟ ಕಾಯ್ದೆಗಳನ್ನು ತರಲಾಗಿತ್ತು ಎಂಬುದನ್ನು ಅವರು ಒಪ್ಪಿಕೊಂಡಿಲ್ಲ. ಮೂರೂ ಕಾಯ್ದೆಗಳನ್ನು ಹಿಂಪಡೆದು ಆದೇಶ ಹೊರಡಿಸಬೇಕು. ಈ ಹೋರಾಟದಲ್ಲಿ ಹುತಾತ್ಮರಾದ ರೈತರ ಕುಟುಂಬಗಳಿಗೆ ತಲಾ ₹ 25 ಲಕ್ಷ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಕೃಷಿ ಕಾಯ್ದೆಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುವು. ಇದು ವಿರಮಿಸುವ ಕಾಲ ಅಲ್ಲ, ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ.