ಬೆಂಗಳೂರು: ಇದೇ 11ರಿಂದ ರಾಜ್ಯದಾದ್ಯಂತ ಜನಸೇವಕ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದರು.
ಆಹಾರ ಸಚಿವ ಕೆ. ಗೋಪಾಲಯ್ಯ ಜತೆ ಮಾಧ್ಯಮಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ತಳಹಂತದಿಂದ ಪಕ್ಷವನ್ನು ಬಲಪಡಿಸುವ ಆಶಯದಿಂದ ಹಮ್ಮಿಕೊಂಡ ಈ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದು, ಪಕ್ಷದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ ಎಂದರು.
ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಿ.ಎನ್. ಅಶ್ವತ್ಥನಾರಾಯಣ, ಜಗದೀಶ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಹಾಗೂ ಬಿ. ಶ್ರೀರಾಮುಲು ನೇತೃತ್ವದ ಐದು ತಂಡಗಳು ಪ್ರತ್ಯೇಕವಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಿ ಸಮಾವೇಶಗಳನ್ನು ನಡೆಸಲಿದ್ದಾರೆ. ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದರು.
ವಿವಿಧ ಜಿಲ್ಲೆಗಳಲ್ಲಿ ಸಮಾವೇಶ ನಡೆಯಲಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಬೆಂಬಲದಿಂದ ಗೆದ್ದಿರುವ ಸದಸ್ಯರನ್ನು ಅಭಿನಂದಿಸಲಾಗುತ್ತದೆ. ಸಮಾವೇಶದ ಸಮಾರೋಪ 17ರಂದು ಬೆಳಗಾವಿಯಲ್ಲಿ ನಡೆಯಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಲಿದ್ದಾರೆ. ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲುವಿಗಾಗಿ ಕಾರ್ಯತಂತ್ರ ರೂಪಿಸಿದ್ದು, 5 ತಂಡಗಳನ್ನು ರಚಿಸಲಾಗಿದೆ ಎಂದರು.