ಬೆಂಗಳೂರು: ನರ್ಸಿಂಗ್ ಮತ್ತು ಅರೆ ವೈದ್ಯಕೀಯ ಕಾಲೇಜುಗಳ ಆರಂಭಕ್ಕೆ ಅನುಮತಿ ನೀಡಿರುವುದರಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ತನಿಖೆಗೆ ಸದನ ಸಮಿತಿ ರಚಿಸುವಂತೆ ಆಗ್ರಹಿಸಿ ವಿಧಾನ ಪರಿಷತ್ನಲ್ಲಿ ಜೆಡಿಎಸ್ ಧರಣಿ ಮುಂದುವರಿಸಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ತನಿಖೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರೂ ಜೆಡಿಎಸ್ ಸದಸ್ಯರು ಒಪ್ಪಲಿಲ್ಲ. ಸದನ ಸಮಿತಿ ರಚಿಸಲೇಬೇಕು ಎಂದು ಪಟ್ಟು ಹಿಡಿದರು.
ಈ ವೇಳೆ ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಮತ್ತು ಜೆಡಿಎಸ್ ನಾಯಕರ ಜೊತೆ ಸಭೆ ನಡೆಸಿ ಸಹಮತಕ್ಕೆ ಬರಲು ಚರ್ಚೆಗೆ ಆಹ್ವಾನಿಸಿದರು. ಹೀಗಾಗಿ ಸಭೆಯನ್ನು 10 ನಿಮಿಷ ಮುಂದೂಡುವುದಾಗಿ ಪ್ರಕಟಿಸಿದರು.
ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಪೀಠದಮುಂಭಾಗದಲ್ಲಿ ಜೆಡಿಎಸ್ ಸದಸ್ಯರು ಧರಣಿ ಆರಂಭಿಸಿದರು. ಸದನ ಸಮಿತಿ ರಚಿಸಲೇಬೇಕು ಎಂದು ಜೆಡಿಎಸ್ನಕೆ.ಟಿ. ಶ್ರೀಕಂಠೇಗೌಡ ಆಗ್ರಹಿಸಿದರು.
ತಜ್ಞರ ಸಮಿತಿಯಿಂದ ತನಿಖೆ ನಡೆಸಲಾಗುವುದು. ಭ್ರಷ್ಟಾಚಾರ ನಡೆದಿರುವುದಕ್ಕೆ ದಾಖಲೆ ನೀಡಲಿ. ಲೋಪ ಎಲ್ಲಿ ಆಗಿದೆ ಎಂದು ಹೇಳಲಿ' ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದರೂ ಜೆಡಿಎಸ್ ಸದಸ್ಯರು ಒಪ್ಪಲಿಲ್ಲ. ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಜೆಡಿಎಸ್ ಸದಸ್ಯರ ಬೇಡಿಕೆಯನ್ನು ಬೆಂಬಲಿಸಿದರು. ಸರ್ಕಾರ ಪ್ರತಿಷ್ಟೆಯಾಗಿ ತೆಗೆದುಕೊಳ್ಳದೆ ಸದನ ಸಮಿತಿ ರಚಿಸುವಂತೆ ಸಲಹೆ ನೀಡಿದರು.