ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಶುಕ್ರವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಕೋವಿಡ್ ಕಾರಣದಿಂದ ಪ್ರತ್ಯೇಕ ವಾಸದಲ್ಲಿರುವ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ, ಪುತ್ರಿ ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿರುವ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂ ಮತ್ತು ಕ್ಷೇತ್ರಗಳಲ್ಲಿರುವ ಶಾಸಕರು ವರ್ಚ್ಯುಯಲ್ ಆಗಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಾಸಕರಾದ ನಾಗನಗೌಡ ಕುಂದಕೂರ, ವೆಂಕಟರಾವ್ ನಾಡಗೌಡ, ಡಾ.ಕೆ.ಅನ್ನದಾನಿ, ಅಶ್ವಿನ್ ಕುಮಾರ್, ನಿಸರ್ಗ ನಾರಾಯಣಸ್ವಾಮಿ, ದೇವಾನಂದ ಚೌಹಾಣ್, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ ಸಭೆಯಲ್ಲಿ ಖುದ್ದು ಹಾಜರಿದ್ದರು.
ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಬಂಡೆಪ್ಪ ಕಾಶೆಂಪುರ, ‘ನಮ್ಮ ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರು ಪ್ರಧಾನಿಯಾಗಿದ್ದ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ್ದರು. ಈಗ ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ರಾಷ್ಟ್ರಪತಿಯಾಗುವ ಅವಕಾಶ ಬಂದಿದೆ. ಆದ್ದರಿಂದ ದ್ರೌಪದಿ ಮುರ್ಮು ಅವರ ಪರವಾಗಿ ಮತ ಚಲಾಯಿಸಲು ನಿರ್ಧರಿಸಿದ್ದೇವೆ’ ಎಂದರು.