ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಿಎಂ ಯಡಿಯೂರಪ್ಪ ಸಭೆ ಕರೆದಿದ್ದರೂ, ಅದರಿಂದ ಪ್ರಯೋಜನವಿಲ್ಲ. ಕೋವಿಡ್ ಚಿಕಿತ್ಸೆ ಕುರಿತು ಸ್ಪಷ್ಟ ಯೋಜನೆ ಮತ್ತು ಸೌಕರ್ಯ ಹೊಂದಿರಬೇಕು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್. ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ?
ಕೇಂದ್ರ, ರಾಜ್ಯ ಸರ್ಕಾರಗಳಿಗೆ 2ನೇ ಅಲೆ ಕಾಣಿಸಿಕೊಳ್ಳುವ ಎಚ್ಚರಿಕೆಗಳಿದ್ದವು. ಅದನ್ನು ಗಂಭೀರವಾಗಿ ಪರಿಗಣಿಸಿದ್ದರೆ ಪರಿಸ್ಥಿತಿ ಹೀಗಾಗುತ್ತಿರಲಿಲ್ಲ. ಇದೆಲ್ಲದರ ಮಧ್ಯೆ ಕೋವಿಡ್ ಚಿಕಿತ್ಸೆಗೆ ಬಳಸಲಾಗುವ ರೆಮ್ಡಿಸಿವಿರ್ ಎಂಬ ಚುಚ್ಚು ಮದ್ದಿಗೆ ದೇಶದಲ್ಲಿ ಅಭಾವ ಸೃಷ್ಟಿಯಾಗಿದೆ. ಸೋಂಕಿತರಿಗೆ ಚಿಕಿತ್ಸೆಯೇ ಖಾತ್ರಿ ಇಲ್ಲದಂತಾಗಿದೆ.
ರೆಮ್ಡಿಸಿವಿರ್ ಚುಚ್ಚುಮದ್ದನ್ನು ಇಷ್ಟ ಬಂದಂತೆ ರಫ್ತು ಮಾಡಿದ್ದ ಕೇಂದ್ರ ಸರ್ಕಾರವು ಟೀಕೆಗಳು ಬರುತ್ತಲೇ, ಔಷಧಿಗೆ ಅಭಾವ ಎದುರಾಗುತ್ತಲೇ ರಫ್ತು ನಿಷೇಧಿಸಿದೆ. ಆದರೆ, ಈಗ ಕಾಲ ಮಿಂಚಿದೆ. ಒಂದೆಡೆ ಕೋವಿಡ್ ಪ್ರಕರಣಗಳು ದಿಢೀರ್ ಏರಿಕೆಯಾಗಿದೆ. ಆದರೆ, ದೇಶದ ಆಸ್ಪತ್ರೆಗಳು ರೆಮ್ಡಿಸಿವಿರ್ಗಾಗಿ ಕಾದು ಕೂರುವ ಪರಿಸ್ಥಿತಿ ಉದ್ಭವಿಸಿದೆ.
ಈ ಮಧ್ಯೆ ರೆಮ್ಡಿಸಿವಿರ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ, ನಕಲಿ ಔಷಧ ಪೂರೈಕೆಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಒಂದೆಡೆ ಔಷಧದ ದಾಸ್ತಾನು ಮಾಡದೇ ವಿಫಲವಾಗಿರುವ ಸರ್ಕಾರ, ಕಾಳ ಸಂತೆ, ನಕಲಿ ಹಾವಳಿ ನಿಯಂತ್ರಿಸದೇ ಅದಕ್ಷತೆ ಮೆರೆದಿದೆ. ಇಲ್ಲಿ ಕೇಂದ್ರ, ರಾಜ್ಯ ಎಂಬ ಮಾತಿಲ್ಲ. ಎರಡೂ ಸರ್ಕಾರಗಳೂ ಕೋವಿಡ್ ವಿಷಯದಲ್ಲಿ ಎಡವಿವೆ.
ಕೋವಿಡ್ ನಿಯಂತ್ರಣಕ್ಕಾಗಿ ಬಿಗಿ ಕ್ರಮ ಕೈಗೊಳ್ಳುವುದಾಗಿಯೂ, ಈ ಬಗ್ಗೆ ವಿಪಕ್ಷಗಳೊಂದಿಗೆ ಸಭೆ ನಡೆಸುವುದಾಗಿಯೂ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೆ, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ?
— H D Kumaraswamy (@hd_kumaraswamy) April 14, 2021
1/5
ಕೋವಿಡ್ ನಿಯಂತ್ರಿಸುವ ವಿಚಾರದಲ್ಲಿ ಸರ್ಕಾರಗಳಿಗೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ, ಎಚ್ಚರಿಕೆಗಳನ್ನು ಕಡೆಗಣಿಸಿ, ನಾಗರಿಕರ ಆರೋಗ್ಯದ ವಿಷಯದಲ್ಲಿ ನಿರ್ಲಕ್ಷ್ಯ ತೋರುವ ನಡೆಗಳು ಖಂಡನೀಯ. ಸರ್ಕಾರಗಳು ಕನಿಷ್ಠ, ಚಿಕಿತ್ಸೆಗೆ ಅಗತ್ಯವಿರುವ ಔಷಧಗಳನ್ನಾದರೂ ದಾಸ್ತಾನು ಮಾಡಿಕೊಳ್ಳಬೇಕು. ಅದಿಲ್ಲದೇ, ಸಭೆಗಳನ್ನು ನಡೆಸಿ ಪ್ರಯೋಜನವಿಲ್ಲ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.