ಬೆಂಗಳೂರು: ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆಯನ್ನು ಕಾಯಂಗೊಳಿಸುವ ಮೂಲಕ ರಾಜ್ಯ ಸರ್ಕಾರ ಅವರ ಬೇಡಿಕೆಯನ್ನು ತಕ್ಷಣ ಈಡೇರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯರಾದ ಕೆ.ಟಿ. ಶ್ರೀಕಂಠೇಗೌಡ ಮತ್ತು ಎಸ್.ಎಲ್. ಭೋಜೇಗೌಡ ಆಗ್ರಹಿಸಿದರು.
ಜೆಡಿಎಸ್ ಪ್ರಧಾನ ಕಚೇರಿ ಜೆ.ಪಿ. ಭವನದಲ್ಲಿ ಬುಧವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೇವಾ ಭದ್ರತೆಗೆ ಒತ್ತಾಯಿಸಿ ಧರಣಿ ನಡೆಸುತ್ತಿರುವ ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದೆ. ಅವರಿಗೆ ಅನ್ಯಾಯ ಆಗದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಕರ್ತವ್ಯಕ್ಕೆ ಸೇರಿದ ದಿನದಿಂದಲೇ ಅವರ ಸೇವೆಯನ್ನು ಕಾಯಂಗೊಳಿಸಬೇಕು. ಸೇವಾ ಭದ್ರತೆ ಆದೇಶ ಹೊರಡಿಸುವ ಮುನ್ನವೇ ಈ ಕುರಿತು ಸ್ಪಷ್ಟ ಆದೇಶ ಪ್ರಕಟಿಸಬೇಕು’ ಎಂದು ಶ್ರೀಕಂಠೇಗೌಡ ಹೇಳಿದರು.
‘ಶಾಲೆಗಳ ಮಾನ್ಯತೆ ನವೀಕರಣ, ಉಪನ್ಯಾಸಕರ ಸೇವೆ ಕಾಯಂ ಸೇರಿದಂತೆ ಶಿಕ್ಷಣ ಕ್ಷೇತ್ರದ ಎಲ್ಲ ಸಮಸ್ಯೆಗಳಿಗೂ ಸರ್ಕಾರ ಸ್ಪಂದಿಸಬೇಕು. ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳಿಗೆ ನೋಟಿಸ್ ಜಾರಿಗೊಳಿಸಿ, ಕಿರುಕುಳ ನೀಡುತ್ತಿರುವುದನ್ನು ನಿಲ್ಲಿಸಬೇಕು’ ಎಂದು ಭೋಜೇಗೌಡ ಒತ್ತಾಯಿಸಿದರು.
ಕೋವಿಡ್ ಕಾರಣದಿಂದ ಮತ್ತೆ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರ ಸರಿಯಲ್ಲ. ಇದರಿಂದ ವಿದ್ಯಾರ್ಥಿಗಳು, ಶಿಕ್ಷಕರು ಸಂಕಷ್ಟಕ್ಕೆ ಸಿಲುಕುತ್ತಾರೆ. ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.