ನವದೆಹಲಿ: ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಿಶೇಷ ಗಮನ ಹರಿಸುವಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಶನಿವಾರ ನಡ್ಡಾ ಅವರೊಂದಿಗಿನ ಭೇಟಿಯ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
'ನಡ್ಡಾ ಅವರು ನನ್ನ ಮೇಲೆ ಸಾಕಷ್ಟು ನಂಬಿಕೆ ಹೊಂದಿದ್ದು, ಒಳ್ಳೆಯ ಅಭಿಪ್ರಾಯ ಹೊಂದಿದ್ದಾರೆ. ಪಕ್ಷ ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ ಎಂದು ಅವರು ತಿಳಿಸಿದರು.
'ನಾನು ರಾಜೀನಾಮೆ ನೀಡುವ ಪ್ರಸಂಗ ಬಂದಿಲ್ಲ. ರಾಜೀನಾಮೆ ವಿಷಯ ಮುಚ್ಚಿಡುವಂಥದ್ದಲ್ಲ. ಯಾರೂ ಈವರೆಗೆ ರಾಜೀನಾಮೆ ನೀಡುವಂತೆ ಸೂಚಿಸಿಲ್ಲ. ಆ ರೀತಿಯ ಸುದ್ದಿಗಳು ಹಬ್ಬಿದಲ್ಲಿ ಅದಕ್ಕೆಬೆಲೆ ಇಲ್ಲ' ಎಂದು ಅವರು ಸ್ಪಷ್ಟಪಡಿಸಿದರು.