ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಮೇಳ, ಪಕ್ಷ ಸಂಘಟನೆ ಚರ್ಚೆ: ಬಿಜೆಪಿ ಮುಖ್ಯಮಂತ್ರಿಗಳ ಜೊತೆ ನಡ್ಡಾ ಸಂವಾದ

Last Updated 20 ಜೂನ್ 2021, 18:50 IST
ಅಕ್ಷರ ಗಾತ್ರ

ಬೆಂಗಳೂರು: ‘ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸೋಮವಾರ (ಜೂನ್‌ 21) ಹಮ್ಮಿಕೊಂಡಿರುವ ಮಹಾ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಸಮರ್ಪಕವಾಗಿಕೋವಿಡ್‌ನ್ನು ನಿಭಾಯಿಸುವ ಜೊತೆಗೆ ಕೇಂದ್ರ– ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಲಹೆ ನೀಡಿದ್ದಾರೆ.

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಅವರು ಭಾನುವಾರ ನಡೆಸಿದ ವಿಡಿಯೊ ಸಂವಾದದಲ್ಲಿ ತಮ್ಮ ನಿವಾಸ ‘ಕಾವೇರಿ’ಯಿಂದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದರು. ಸುಮಾರು ಒಂದು ಗಂಟೆ ಸಂವಾದ ನಡೆಯಿತು.

ಪಕ್ಷ ಸಂಘಟನೆಗೂ ಒತ್ತು: ‘ಕೋವಿಡ್ ಸಂಕಷ್ಟ ಸಮಯದಲ್ಲಿ ಕಾರ್ಯಕರ್ತರು ಜನರ ಜತೆ ಇರಬೇಕು. ಬೂತ್ ಮಟ್ಟಕ್ಕೆ ಕಾರ್ಯಕ್ರಮಗಳು ತಲುಪಬೇಕು. ಲಸಿಕೆ ಎಲ್ಲರಿಗೂ ಸಿಗುವಂತೆ ಮಾಡಬೇಕು. ಪಕ್ಷ ಸಂಘಟನೆ ಚಟುವಟಿಕೆಗೂ ಆದ್ಯತೆ ನೀಡಬೇಕು’ ಎಂದೂ ನಡ್ಡಾ ಸಲಹೆ ನೀಡಿದ್ದಾರೆ.

‘ಮುಂದಿನ ಚುನಾವಣೆಗಳಲ್ಲಿ ಕೋವಿಡ್‌ ಪ್ರಮುಖ ವಿಷಯ ಆಗಲಿದೆ. ಅದನ್ನು ನಿಭಾಯಿಸುವಲ್ಲಿ ಯಶಸ್ವಿಯಾದರೆ ಪಕ್ಷಕ್ಕೆ ಲಾಭ, ಸಂಘಟನೆಗೂ ಲಾಭ. ವಿಫಲವಾದರೆ ಪಕ್ಷದ ವಿರುದ್ಧ ವಿರೋಧ ಪಕ್ಷಗಳಿಗೆ ಅಸ್ತ್ರ ಸಿಕ್ಕಂತಾಗಲಿದೆ’ ಎಂದು ಕಿವಿಮಾತು ಹೇಳಿದ್ದಾರೆ.

‘ಕೋವಿಡ್ ನಿಯಮಗಳನ್ನು ಪಾಲಿಸಿ ಪ್ರತಿ ತಾಲ್ಲೂಕಿನಲ್ಲೂ ಯೋಗ ದಿನ ಆಚರಿಸಬೇಕು. ಕಲಾವಿದರು, ಪ್ರಮುಖ ವ್ಯಕ್ತಿಗಳು, ಕ್ರೀಡಾಪಟುಗಳು, ಸಾರ್ವಜನಿಕರು ಭಾಗವಹಿಸಲು ಆಹ್ವಾನ ನೀಡಬೇಕು. ಇದೇ 25ರಂದು ತುರ್ತುಪರಿಸ್ಥಿತಿಯ ನೆನಪಿಗಾಗಿ ಎಲ್ಲ ತಾಲ್ಲೂಕುಗಳಲ್ಲಿ ಕರಾಳ ದಿನಾಚರಣೆಗೆ ಪಕ್ಷ ನಿರ್ಧರಿಸಿದೆ. ಅಂದು ವಿಡಿಯೊ ಸಂವಾದ ಮೂಲಕ ತುರ್ತು ಪರಿಸ್ಥಿತಿ ವೇಳೆ ಜೈಲಿನಲ್ಲಿದ್ದವರನ್ನು ಗುರುತಿಸುವ ಕೆಲಸ ಮಾಡಬೇಕು’ ಎಂದೂ ಸಲಹೆ ನೀಡಿದರು.

‘ಇದೇ 23ರಂದು ಡಾ. ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರ ಪುಣ್ಯತಿಥಿ ಮತ್ತು ಜುಲೈ 6ರಂದು ಅವರ ಜನ್ಮದಿನ ಇದೆ. ಈ ಅವಧಿಯಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಶ್ಯಾಮ್‌ ಪ್ರಸಾದ್ ಮುಖರ್ಜಿ ಅವರ ಚಿಂತನೆಗಳು, ಜೀವನ ಸ್ಫೂರ್ತಿ ಬಗ್ಗೆ ವಿಡಿಯೊ ಸಂವಾದ ಮೂಲಕ ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಬೇಕು’ ಎಂದೂ ನಡ್ಡಾ ಸಲಹೆ ನೀಡಿದ್ದಾರೆ.

11 ಲಕ್ಷ ಡೋಸ್ ವಿತರಣೆ ಗುರಿ
ಕೇಂದ್ರ ಸರ್ಕಾರದ ನಿರ್ದೇಶನದಂತೆ ಆರೋಗ್ಯ ಇಲಾಖೆಯು ರಾಜ್ಯದಾದ್ಯಂತ ಸೋಮವಾರ (ಜೂ.21) ಲಸಿಕಾ ಮೇಳವನ್ನು ಹಮ್ಮಿಕೊಂಡಿದ್ದು, ಒಂದೇ ದಿನ 11 ಲಕ್ಷ ಡೋಸ್ ಲಸಿಕೆ ವಿತರಿಸುವ ಗುರಿಯನ್ನು ಹಮ್ಮಿಕೊಂಡಿದೆ.

ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಲಸಿಕಾ ಮೇಳದಲ್ಲಿ 45 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಬೇಕು. ಅದೇ ರೀತಿ, ಎರಡನೇ ಡೋಸ್ ಪಡೆಯುವವರು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಯೋಧರಿಗೆ ಲಸಿಕೆ ಒದಗಿಸಬೇಕು. ಗುರುತಿಸಲಾದ 18 ರಿಂದ 44 ವರ್ಷದವರೆಗಿನ ದುರ್ಬಲ ಗುಂಪಿನ ಫಲಾನುಭವಿಗಳು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಬೇಕು. ಈ ಮೇಳವನ್ನು ಯಶಸ್ವಿಯಾಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು’ ಎಂದು ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಂಸ್ಥೆಗಳು, ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ರಾಜ್ಯದಾಧ್ಯಂತ 5 ಸಾವಿರಕ್ಕೂ ಹೆಚ್ಚು ಲಸಿಕಾ ಕೇಂದ್ರಗಳಲ್ಲಿ ಮೇಳ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT