ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಾಯುಕ್ತರಾಗಿ ನ್ಯಾ. ಬಿ.ಎಸ್‌. ಪಾಟೀಲ ಪ್ರಮಾಣವಚನ ಸ್ವೀಕಾರ

Last Updated 15 ಜೂನ್ 2022, 5:35 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ನೂತನ ಲೋಕಾಯುಕ್ತರಾಗಿ ಹಾಲಿ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ನೂತನ ಲೋಕಾಯುಕ್ತರಿಗೆ ಪ್ರಮಾಣವಚನ ಬೋಧಿಸಿದರು. ನ್ಯಾ. ಬಿ.ಎಸ್‌. ಪಾಟೀಲ ಅವರು ಭಗವಂತ, ಸತ್ಯ ಮತ್ತು ನಿಷ್ಠೆಯ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೂಗುಚ್ಛ ನೀಡಿ ನೂತನ ಲೋಕಾಯುಕ್ತರನ್ನು ಅಭಿನಂದಿಸಿದರು. ವಸತಿ ಸಚಿವ ವಿ ಸೋಮಣ್ಣ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ, ಪಿ. ರಾಜೀವ್‌, ಕೆ. ಜೆ. ಜಾರ್ಜ್‌, ಎಂ. ಬಿ. ಪಾಟೀಲ, ಈಶ್ವರ್‌ ಖಂಡ್ರೆ, ಮಾಜಿ ಲೋಕಾಯುಕ್ತರಾದ ಎನ್.‌ ಸಂತೋಷ್‌ ಹೆಗ್ಡೆ, ಪಿ. ವಿಶ್ವನಾಥ್‌ ಶೆಟ್ಟಿ, ರಾಜ್ಯ ಹೈಕೋರ್ಟ್‌ನ ನ್ಯಾಯಮೂರ್ತಿಗಳು, ನ್ಯಾಯಾಂಗ ಇಲಾಖೆ ಅಧಿಕಾರಿಗಳು, ವಕೀಲರು ಮತ್ತು ನೂತನ ಲೋಕಾಯುಕ್ತರ ಕುಟುಂಬದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ 2022ರ ಜನವರಿ 27ರಂದು ನಿವೃತ್ತರಾಗಿದ್ದರು. ಅಂದಿನಿಂದ ಈ ಹುದ್ದೆ ಖಾಲಿ ಇತ್ತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಮತ್ತು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರ ಜತೆ ಸಮಾಲೋಚಿಸಿದ ಬಳಿಕ ಬಿ.ಎಸ್‌. ಪಾಟೀಲ ಅವರ ಹೆಸರನ್ನು ಲೋಕಾಯುಕ್ತರ ಹುದ್ದೆಗೆ ಶಿಫಾರಸು ಮಾಡಿದ್ದರು. ಅದರಂತೆ ರಾಜ್ಯಪಾಲರು ನೇಮಕಾತಿ ಆದೇಶ ಹೊರಡಿಸಿದ್ದರು.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಪದೆಕಣ್ಣೂರು ಗ್ರಾಮದಲ್ಲಿ 1956ರ ಜೂನ್‌ 1ರಂದು ಜನಿಸಿದ್ದ ಪಾಟೀಲ, ಕಾನೂನು ಪದವಿ ಪೂರ್ಣಗೊಳಿಸಿ 1980ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. ಹೈಕೋರ್ಟ್‌ ನ್ಯಾಯಮೂರ್ತಿಯಾಗಿ 2004ರ ಅಕ್ಟೋಬರ್‌ 21ರಂದು ನೇಮಕಗೊಂಡಿದ್ದರು. 13 ವರ್ಷ 7 ತಿಂಗಳ ಕಾಲ ಕಾರ್ಯನಿರ್ವಹಿಸಿ 2018ರ ಮೇ 31ರಂದು ನಿವೃತ್ತರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT