ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಹೈಕೋರ್ಟ್ನ ಧಾರವಾಡ ಪೀಠ ನೀಡಿದ ಆದೇಶದ ಪ್ರತಿಯನ್ನು ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಸೆಲ್ವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರಗೌಡ ಮಾಲಿಪಾಟೀಲ ಅವರು ಸಲ್ಲಿಸಿದ್ದಾರೆ.
ಚುನಾವಣೆಯನ್ನು ಶೀಘ್ರದಲ್ಲಿ ನಡೆಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಿಶೇಖರಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ನಿಯಮಾನುಸಾರ ಪರಿಗಣಿಸಿ, ಎರಡು ತಿಂಗಳ ಒಳಗಾಗಿ ಇತ್ಯರ್ಥಗೊಳಿಸಬೇಕು ಎಂದು ಪೀಠವು ಸರ್ಕಾರಕ್ಕೆ ಆದೇಶ ನೀಡಿತ್ತು.
ಹೈಕೋರ್ಟ್ ಆದೇಶದ ಪ್ರತಿ ಲಭ್ಯವಾದ ನಂತರ ಕನ್ನಡ ಸಾಹಿತ್ಯ ಪರಿಷತ್ಗೆ ಚುನಾವಣೆ ನಿಗದಿಪಡಿಸಲು ಮನವಿ ಮಾಡಿಕೊಳ್ಳುವಂತೆ ಶೇಖರಗೌಡ ಅವರಿಗೆ ನ್ಯಾಯಾಲಯ ಆದೇಶಿಸಿತ್ತು.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಕನ್ನಡ ಸಾಹಿತ್ಯ ಪರಿಷತ್ ಚುನಾವಣಾಧಿಕಾರಿ ಅವರಿಗೂ ನ್ಯಾಯಾಲಯದ ಆದೇಶದ ಪ್ರತಿಯನ್ನು ಸಲ್ಲಿಸಲಾಯಿತು.
’ಶೀಘ್ರ ಕಸಾಪಗೆ ಚುನಾವಣೆ ನಡೆಸಬೇಕು. ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಪ್ರಕ್ರಿಯೆಯನ್ನು ಮತ್ತೆ ಆರಂಭಿಸಿ ಚುನಾವಣೆ ನಡೆಸಬೇಕು’ ಎಂದು ಶೇಖರಗೌಡ ಮಾಲಿಪಾಟೀಲ ಮನವಿ ಮಾಡಿದ್ದಾರೆ.