ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಸಾಪ ಚುನಾವಣೆ ಮೇ 9ಕ್ಕೆ: 3 ಲಕ್ಷಕ್ಕೂ ಅಧಿಕ ಮಂದಿಗೆ ಮತದಾನಕ್ಕೆ ಅವಕಾಶ

3 ಲಕ್ಷಕ್ಕೂ ಅಧಿಕ ಮಂದಿಗೆ ಮತದಾನಕ್ಕೆ ಅವಕಾಶ * ಮೇ 12ಕ್ಕೆ ರಾಜ್ಯಾಧ್ಯಕ್ಷ ಸ್ಥಾನದ ಫಲಿತಾಂಶ
Last Updated 7 ಫೆಬ್ರುವರಿ 2021, 14:54 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಮೇ 9ಕ್ಕೆ ಚುನಾವಣೆ ನಡೆಯಲಿದೆ.

ಮತದಾರರು ಗೊತ್ತುಪಡಿಸಿದ ಮತಗಟ್ಟೆಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತ ಚಲಾಯಿಸಲು ಅವಕಾಶ ನೀಡಲಾಗುತ್ತದೆ. ಈ ಬಾರಿ 3 ಲಕ್ಷಕ್ಕೂ ಅಧಿಕ ಮತದಾರರಿದ್ದು, 400 ಕ್ಕೂ ಅಧಿಕ ಮತಗಟ್ಟೆಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಪ್ರಕ್ರಿಯೆ ಮುಗಿದ ಬಳಿಕ ಅದೇ ದಿನ ಜಿಲ್ಲಾ ಕಸಾಪ ಚುನಾವಣಾಧಿಕಾರಿಗಳು ಮತಗಳನ್ನು ಎಣಿಕೆ ಮಾಡಿ, ಜಿಲ್ಲಾ ಘಟಕದ ಅಧ್ಯಕ್ಷರ ಚುನಾವಣಾ ಫಲಿತಾಂಶವನ್ನು ಘೋಷಿಸುತ್ತಾರೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದ ಮತದಾನದ ಎಣಿಕೆಯ ಫಲಿತಾಂಶದ ವಿವರವನ್ನು ಜಿಲ್ಲಾ ಚುನಾವಣಾಧಿಕಾರಿಗಳು ಕೇಂದ್ರ ಚುನಾವಣಾಧಿಕಾರಿಗೆ ಕಳುಹಿಸಬೇಕಾಗುತ್ತದೆ ಎಂದು ಕಸಾಪ ಕೇಂದ್ರ ಚುನಾವಣಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.

‘ಮೇ 11 ರಂದು ಬೆಳಿಗ್ಗೆ 10 ಗಂಟೆಗೆ ಪರಿಷತ್ತಿನ ಚುನಾವಣಾಧಿಕಾರಿಯ ಕೇಂದ್ರ ಕಚೇರಿಯಲ್ಲಿ ಗಡಿನಾಡ ಘಟಕಗಳ ಅಧ್ಯಕ್ಷರ ಚುನಾವಣೆಗೆ ಸಂಬಂಧಪಟ್ಟ ಅಂಚೆ ಮತಪತ್ರಗಳನ್ನು ಎಣಿಕೆ ಮಾಡಿ, ಫಲಿತಾಂಶವನ್ನು ಘೋಷಿಸಲಾಗುತ್ತದೆ. ರಾಜ್ಯಾಧ್ಯಕ್ಷರ ಆಯ್ಕೆಗೆ ಎಲ್ಲ ಜಿಲ್ಲೆಗಳಿಂದ ಬಂದ ಮತಗಳು ಹಾಗೂ ಅಂಚೆ ಮತಗಳನ್ನು ಕ್ರೋಡೀಕರಿಸಿ, ಮೇ 12 ರಂದು ಫಲಿತಾಂಶವನ್ನು ಘೋಷಿಸಲಾಗುತ್ತದೆ’ ಎಂದು ವಿವರಿಸಿದ್ದಾರೆ.

‘ಈ ಎಲ್ಲ ಪ್ರಕ್ರಿಯೆಗಳನ್ನು ಪರಿಷತ್ತಿನ ನಿಯಮಾವಳಿಯಂತೆ ನಡೆಸಲಾಗುತ್ತದೆ. ಈ ಹಿಂದೆ ಕಸಾಪ ಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಹಾಗೂ ಪರಿಷತ್ತಿನ ನಿಬಂಧನೆಗಳ ತಿದ್ದುಪಡಿ ಮತ್ತು ಚುನಾವಣಾ ಸಲಹಾ ಸಮಿತಿಯ ಹಾಲಿ ಸದಸ್ಯ ಎಸ್.ಟಿ.ಮೋಹನ್‌ ರಾಜು ಅವನ್ನು ವಿಶೇಷ ಚುನಾವಣಾಧಿಕಾರಿಯನ್ನಾಗಿ ನೇಮಿಸಿಕೊಳ್ಳಾಗಿದೆ. ಸತತ ಮೂರು ವರ್ಷಗಳು ಪರಿಷತ್ತಿನ ಸದಸ್ಯರಾಗಿರುವವರು ಚುನಾವಣೆಯಲ್ಲಿ ಮತದಾನ ಮಾಡಬಹುದು. 10 ವರ್ಷಗಳ ಹಿಂದಿನಿಂದ ಸದಸ್ಯರಾಗಿರುವವರು ಅಧ್ಯಕ್ಷ ಸ್ಥಾನಕ್ಕೆ, 5 ವರ್ಷಗಳಿಂದ ಸದಸ್ಯರಾಗಿರುವವರು ಜಿಲ್ಲಾ ಮತ್ತು ಗಡಿನಾಡು ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅರ್ಹರಾಗಿರುತ್ತಾರೆ’ ಎಂದು ತಿಳಿಸಿದ್ದಾರೆ.

ಮಾ.29ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ

*ರಾಜ್ಯಾಧ್ಯಕ್ಷ ಹಾಗೂ ಗಡಿನಾಡು ಘಟಕದ ಅಧ್ಯಕ್ಷರ ಸ್ಥಾನಕ್ಕೆ ಮಾ.29ರಿಂದ ಏ.7ರವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ.

*ಜಿಲ್ಲಾ ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲಾ ಕೇಂದ್ರದ ತಾಲ್ಲೂಕು ತಹಶೀಲ್ದಾರ್ (ಜಿಲ್ಲಾ ಕಸಾಪ ಚುನಾವಣಾಧಿಕಾರಿಗಳು) ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬೇಕು.

*ಏ.8ರಂದು ಎಲ್ಲ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.12ರ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಅವಕಾಶ ಇರಲಿದೆ.

*ಏ.12ರಂದು ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.

ಫೆ.22 ರವರೆಗೆ ಆಕ್ಷೇಪ ಸಲ್ಲಿಕೆಗೆ ಅವಕಾಶ

ಚುನಾವಣೆಗೆ ಅರ್ಹರಾಗಿರುವ ಕರಡು ಮತದಾರರ ಪಟ್ಟಿಯನ್ನು ಫೆ.8ರಂದು ಪರಿಷತ್ತಿನ ಕೇಂದ್ರ ಕಚೇರಿ, ಜಿಲ್ಲಾ ಕೇಂದ್ರಗಳ ತಾಲ್ಲೂಕು ತಹಶೀಲ್ದಾರರ ಕಚೇರಿಗಳಲ್ಲಿ ಪ್ರಕಟಿಸಲಾಗುತ್ತದೆ. ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಫೆ.22 ಕಡೆಯ ದಿನಾಂಕವಾಗಿದೆ. ಕಸಾಪ 8ಎ ಅರ್ಜಿ ನಮೂನೆಗಳಲ್ಲಿ ಅಥವಾ ಮನವಿ ರೂಪದಲ್ಲಿ ಕೇಂದ್ರ ಚುನಾವಣಾಧಿಕಾರಿಗಳು ಅಥವಾ ಎಲ್ಲ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಸಹಾಯಕ ಚುನಾವಣಾಧಿಕಾರಿಗಳಿಗೆ ಸಲ್ಲಿಸಬೇಕು. ಅಂತಿಮ ಮತದಾರರ ಪಟ್ಟಿಯನ್ನು ಮಾ.25ರಂದು ಪ್ರಕಟಿಸಲಾಗುತ್ತದೆ ಎಂದು ಗಂಗಾಧರಸ್ವಾಮಿ ತಿಳಿಸಿದ್ದಾರೆ.

ಮೊಬೈಲ್ ಆ್ಯಪ್ ಅಭಿವೃದ್ಧಿ

ಈ ಬಾರಿ ಬೆಂಗಳೂರು ನಗರ ಜಿಲ್ಲೆಗೆ ಸಂಬಂಧಿಸಿದಂತೆ 28 ವಿಧಾನಸಭೆ ಕ್ಷೇತ್ರಗಳಲ್ಲಿಯೂ ಪ್ರತ್ಯೇಕವಾಗಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ. ಅದೇ ರೀತಿ, ವಿಧಾನಸಭೆ ಅನುಸಾರ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗುತ್ತಿದೆ. ಹೊಸದಾಗಿ ರಚನೆಯಾದ 52 ತಾಲ್ಲೂಕುಗಳಲ್ಲಿಯೂ ಚುನಾವಣೆ ಪ್ರಕ್ರಿಯೆ ನಡೆಸಲಾಗುತ್ತದೆ. ಮತದಾರರ ವಿಳಾಸ ಮತ್ತು ವಿವರಗಳನ್ನು ಸುಲಭವಾಗಿ ಪಡೆದುಕೊಳ್ಳಲು Election kasapa ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ.

ಪರಿಷತ್ತಿನ ವೆಬ್‌ ಪೋರ್ಟಲ್‌ www.kasapa.inನಲ್ಲಿಯೂ ವಿವರಗಳು ದೊರೆಯಲಿವೆ. ಮತದಾರರ ಕರಡು ಪಟ್ಟಿಯನ್ನು ಕನ್ನಡ ವರ್ಣಮಾಲೆಯ ಅಕ್ಷರಗಳಿಗೆ ಅನುಗುಣವಾಗಿ ಮುದ್ರಿಸಲಾಗಿದೆ. ಇವು ಪರಿಷತ್ತಿನ ಚುನಾವಣೆ ಇತಿಹಾಸದಲ್ಲಿಯೇ ಮೊದಲ ಪ್ರಯತ್ನ ಎಂದು ಗಂಗಾಧರಸ್ವಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT