ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಏ.23ರಂದು ನಡೆದ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಒಮ್ಮತದಿಂದ ದಿನಾಂಕ ನಿಗದಿಪಡಿಸಲಾಗಿತ್ತು. ಸಮ್ಮೇಳನ ಮುಂದೂಡುವಂತೆ ಪರಿಷತ್ತಿನ ಅಧ್ಯಕ್ಷರಿಗೆ ಪತ್ರ ಬರೆದಿದ್ದ ತರಳಬಾಳು ಬೃಹನ್ಮಠದ ಕಾರ್ಯದರ್ಶಿ, ‘ಸೆ.23 ಮತ್ತು ಸೆ.24ರಂದು ಬೃಹನ್ಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಅವರ ಶ್ರದ್ಧಾಂಜಲಿ ಸಮಾರಂಭ ಇದೆ. ಹಾವೇರಿ, ರಾಣೇಬೆನ್ನೂರು, ರಟ್ಟಿಹಳ್ಳಿ, ಹಿರೇಕೆರೂರು ಮೊದಲಾದ ಭಾಗಗಳಿಂದ ಬರುವ ಭಕ್ತರಿಗೆ ತೊಂದರೆಯಾಗಲಿದೆ. ಹಾಗಾಗಿ ಬೇರೆ ದಿನ ಸಮ್ಮೇಳನ ನಡೆಸಿ’ ಎಂದು ಮನವಿ ಮಾಡಿಕೊಂಡಿದ್ದರು.