ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದವರಲ್ಲಿ ಒಬ್ಬರು ನಾಮಪತ್ರ ಹಿಂಪಡೆದಿದ್ದಾರೆ. ಇದರಿಂದಾಗಿ ಅಂತಿಮ ಚುನಾವಣೆ ಕಣದಲ್ಲಿ 21 ಅಭ್ಯರ್ಥಿಗಳಿದ್ದಾರೆ.
ಪರಿಷತ್ತಿನ ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಮೇ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆಯಲು ಸೋಮವಾರ ಕಡೆಯ ದಿನವಾಗಿತ್ತು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬೆಂಗಳೂರಿನ ಕೆ.ಎಂ. ರೇವಣ್ಣ ನಾಮಪತ್ರ ಹಿಂಪಡೆದಿದ್ದಾರೆ.
ಕಣದಲ್ಲಿಮ.ಚಿ. ಕೃಷ್ಣ, ವ.ಚ. ಚನ್ನೇಗೌಡ, ಮಹೇಶ್ ಜೋಶಿ, ಸಂಗಮೇಶ ಬಾದವಾಡಗಿ, ಸಿ.ಕೆ. ರಾಮೇಗೌಡ, ರಾಜಶೇಖರ ಮುಲಾಲಿ, ಬಸವರಾಜ ಶಿ. ಹಳ್ಳೂರ, ಬಾಡದ ಭದ್ರಿನಾಥ್, ಶಿವರಾಜ ಪಾಟೀಲ, ಸರಸ್ವತಿ ಶಿವಪ್ಪ ಚಿಮ್ಮಲಗಿ, ವೈ. ರೇಣುಕಾ, ಶೇಖರಗೌಡ ಮಾಲಿ ಪಾಟೀಲ, ಕೆ. ರತ್ನಾಕರ ಶೆಟ್ಟಿ, ವಾಲ್ಮೀಕಪ್ಪ ಹ. ಯಕ್ಕರನಾಳ, ಮಾಯಣ್ಣ, ಪ್ರಮೋದ್ ಹಳಕಟ್ಟಿ, ಶಿವಪ್ಪ ಮಲ್ಲಪ್ಪ ಬಾಗಲ, ಕೆ. ರವಿ ಅಂಬೇಕರ, ನ.ಶ್ರೀ. ಸುಧೀಂದ್ರರಾವ್, ಶರಣಬಸಪ್ಪ ಕಲ್ಲಪ್ಪ ದಾನಕೈ ಹಾಗೂ ಶಿವರುದ್ರಸ್ವಾಮಿ ಉಳಿದಿದ್ದಾರೆ.
ತಮಿಳುನಾಡು ಘಟಕಕ್ಕೆ ಸ್ಪರ್ಧಿಸಿದವರಲ್ಲಿ ತಮಿಳ್ ಸೆಲ್ವಿ ಮಾತ್ರ ಸ್ಪರ್ಧೆಯಲ್ಲಿದ್ದು, ಉಳಿದವರ ನಾಮಪತ್ರ ತಿರಸ್ಕೃತಗೊಂಡಿದೆ. ಆಂಧ್ರಪ್ರದೇಶ ಗಡಿನಾಡ ಘಟಕಕ್ಕೆ ನಾಮಪತ್ರ ಸಲ್ಲಿಸಿದವರಲ್ಲಿ ಶಶಿಧರ್ ಎನ್ನುವವರು ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ, ಕುಣೆ ಬಾಲರಾಜ, ಅಂಜನ್ ಕುಮಾರ್ ಹಾಗೂ ಎಸ್.ಕೆ. ಜಯಶಂಕರ್ ಅವರು ಅಂತಿಮ ಸ್ಪರ್ಧೆಯಲ್ಲಿದ್ದಾರೆ. ಮಹಾರಾಷ್ಟ್ರ ಗಡಿನಾಡ ಘಟಕಕ್ಕೆ ಸಂಬಂಧಿಸಿದಂತೆ ಸೋಮಶೇಖರ ಜಮಶೆಟ್ಟಿ ಮತ್ತು ಮಲ್ಲಿಕಾಜೆಪ್ಪ ಸೋಮಶೇಖರ ಮಡ್ಡೆ ನಡುವೆ ಸ್ಪರ್ಧೆ ಏರ್ಪಡಲಿದೆ.
ಕೇರಳ ಗಡಿನಾಡ ಘಟಕಕ್ಕೆ ನಡೆಯಲಿರುವ ಚುನಾವಣೆಗೆ ಅಂತಿಮವಾಗಿ ರಾಧಾಕೃಷ್ಣ ಮತ್ತು ಸುಬ್ರಹ್ಮಣ್ಯ ವಿ. ಭಟ್ಟ ಅವರು ಸ್ಪರ್ಧೆಯಲ್ಲಿದ್ದಾರೆ ಎಂದು ವಿಶೇಷ ಚುನಾವಣಾಧಿಕಾರಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.