ಮೈಸೂರು: ‘ವರುಣಾದಿಂದ ಪುತ್ರ ಬಿ.ವೈ.ವಿಜಯೇಂದ್ರ ಸ್ಪರ್ಧೆಗೆ ಹೈಕಮಾಂಡ್ ಒಪ್ಪಿತ್ತು. ಆದರೆ, ನಾನೇ ಬೇಡವೆಂದು ಹೇಳಿದ್ದೇನೆ. ಈ ವಿಚಾರದಲ್ಲಿ ಹೈಕಮಾಂಡ್ ಮನವೊಲಿಸುತ್ತೇನೆ’ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಖಾಸಗಿ ಕಾರ್ಯಕ್ರಮಕ್ಕೆಂದು ಶುಕ್ರವಾರ ಇಲ್ಲಿಗೆ ಬಂದಿದ್ದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
‘ಯಾವ ಕಾರಣಕ್ಕೂ ವಿಜಯೇಂದ್ರ ವರುಣಾದಿಂದ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಇಲ್ಲಿನ ಕಾರ್ಯಕರ್ತರು ಸಾಕಷ್ಟು ಒತ್ತಡ ಹಾಕುತ್ತಿದ್ದಾರೆ. ಆದರೆ, ಅವರು ಶಿಕಾರಿಪುರ ಬಿಟ್ಟು ಬರುವುದಿಲ್ಲ. ಅಲ್ಲೇ ಸ್ಪರ್ಧಿಸುತ್ತಾರೆ. ವರುಣಾ ಕ್ಷೇತ್ರದಿಂದ ಒಳ್ಳೆಯ ಅಭ್ಯರ್ಥಿ ಹಾಕುತ್ತೇವೆ’ ಎಂದು ತಿಳಿಸಿದರು.
‘ನಾನು ಶಿಕಾರಿಪುರದಿಂದ ಕಣಕ್ಕಿಳಿಯದ ಕಾರಣ ವಿಜಯೇಂದ್ರ ಅಲ್ಲಿಂದ ಸ್ಪರ್ಧಿಸಬೇಕು. ಇದು ನನ್ನ ನಿರ್ಧಾರ. ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸುವ ಪ್ರಶ್ನೆಯೂ ಇಲ್ಲ. ಶಿಕಾರಿಪುರ ನನ್ನನ್ನು ಮುಖ್ಯಮಂತ್ರಿ ಮಾಡಿದ ಕ್ಷೇತ್ರ. ಅದನ್ನು ನಾವು ಬಿಡಲು ಸಾಧ್ಯವಿಲ್ಲ. ವರುಣಾದಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಚರ್ಚೆ ಬೇಡ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.