ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಪ್ರಕರಣ: ಇಡೀ ದಿನ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆ

Last Updated 13 ಮಾರ್ಚ್ 2023, 20:19 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್‌ಡಿಎಲ್‌) ಲಂಚ ಪ್ರಕರಣದ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ವಿಚಾರಣೆ ನಡೆಸಿದ್ದು, ಪ್ರಶ್ನೆಗಳಿಗೆ ಸರಿಯಾದ ಉತ್ತರ ನೀಡಿದಿದ್ದರಿಂದ ಮಂಗಳವಾರವೂ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ.

₹ 40 ಲಕ್ಷ ಲಂಚ ಪಡೆದ ಆರೋಪದಲ್ಲಿ ಪ್ರಮುಖ ಆರೋಪಿಯಾಗಿರುವ ವಿರೂಪಾಕ್ಷಪ್ಪ ಅವರು ಸೋಮವಾರ ಬೆಳಿಗ್ಗೆಯಿಂದಲೇ ವಿಚಾರಣೆಗೆ ಹಾಜರಾಗಿದ್ದು, ತಡ ರಾತ್ರಿ ತನಕವೂ ಮುಂದುವರಿದಿತ್ತು.

ಲೋಕಾಯುಕ್ತ ಡಿವೈಎಸ್‌ಪಿ ಅಂಥೋಣಿ ಜಾರ್ಜ್ ಮತ್ತು ತಂಡದ ಎದುರು ಅವರು ಹಾಜರಾಗಿದ್ದರು. ‘ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೆ ತಾವು ಸಿದ್ಧಪಡಿಸಿಕೊಂಡು ಬಂದಿದ್ದ ಉತ್ತರವನ್ನೇ ಮತ್ತೆ ನೀಡಿದರು’ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ವಿರೂಪಾಕ್ಷಪ್ಪ ಅವರ ಮಗ, ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಖಾಸಗಿ ಕಚೇರಿಯಲ್ಲಿ ಸಿಕ್ಕಿದ ₹ 40 ಲಕ್ಷ ಲಂಚ ಪ್ರಕರಣದಲ್ಲಿ ಶಾಸಕರು ಮೊದಲ ಆರೋಪಿ. ಶಾಸಕರ ನಿವಾಸದಲ್ಲಿ ಸಿಕ್ಕಿದ ₹ 6.12 ಕೋಟಿ ನಗದು ಬಗ್ಗೆ ಕೇಳಲಾದ ಪ್ರಶ್ನೆಗಳಿಗೂ ಸರಿಯಾದ ಉತ್ತರ ನೀಡಲಿಲ್ಲ ಎಂದು ಮೂಲಗಳು ಹೇಳಿವೆ.

ನ್ಯಾಯಾಂಗ ಬಂಧನದಲ್ಲಿದ್ದ ಪ್ರಶಾಂತ್ ಮಾಡಾಳ್ ಮತ್ತು ಲೆಕ್ಕಾಧಿಕಾರಿ ಸುರೇಂದ್ರ ಅವರನ್ನು ಲೋಕಾಯುಕ್ತ ಪೊಲೀಸರು ಬಾಡಿ ವಾರೆಂಟ್ ಮೇಲೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರನ್ನೂ ವಿಚಾರಣೆಗೆ ಒಳಪಡಿಸಿದ್ದಾರೆ. ಕಳೆದ ಗುರುವಾರ ಕೂಡ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ವಿಚಾರಣೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT