ಬೆಳಗಾವಿ/ ರಾಯಚೂರು/ಬೀದರ್: ಬೆಳಗಾವಿ ಲೋಕಸಭಾ ಕ್ಷೇತ್ರ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಮೇ 2ರಂದು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಬೆಳಿಗ್ಗೆ 8ರಿಂದ ನಡೆಯಲಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ನಡುವಿನ ಜಿದ್ದಾಜಿದ್ದಿಯ ಹಣಾಹಣಿಗೆ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಸಾಕ್ಷಿಯಾಗಿತ್ತು. ಬಿಜೆಪಿಯ ಮಂಗಲಾ ಸುರೇಶ ಅಂಗಡಿ ಮತ್ತು ಕಾಂಗ್ರೆಸ್ನಿಂದ ಸತೀಶ ಜಾರಕಿಹೊಳಿ ಸ್ಪರ್ಧಿಸಿದ್ದಾರೆ.
ಕೋವಿಡ್–19 ಹಿನ್ನೆಲೆಯಲ್ಲಿ ಕೊಠಡಿಯೊಂದರಲ್ಲಿ ಕೇವಲ 2 ಟೇಬಲ್ಗಳಲ್ಲಿ ಮಾತ್ರ ಎಣಿಕೆ ಪ್ರಕ್ರಿಯೆ ನಡೆಯಲಿದೆ. 17 ಕೊಠಡಿಗಳನ್ನು ಬಳಸಲಾಗುತ್ತಿದೆ. ಹೀಗಾಗಿ, ರಾತ್ರಿ 8ರ ಸುಮಾರಿಗೆ ಅಧಿಕೃತ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಬೆಳಗಾವಿ ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ ಹಾಗೂ ಕಾಂಗ್ರೆಸ್ನಿಂದ ಬಸನಗೌಡ ತುರ್ವಿಹಾಳ ಸೇರಿ ಎಂಟು ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿಯಿಂದ ಶರಣು ಸಲಗರ, ಕಾಂಗ್ರೆಸ್ನಿಂದ ಮಾಲಾ ಬಿ.ನಾರಾಯಣರಾವ್, ಜೆಡಿಎಸ್ನಿಂದ ಸೈಯದ್ ಯಸ್ರಬ್ ಅಲಿಖಾದ್ರಿ, ಪಕ್ಷೇತರರಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಸೇರಿದಂತೆ 12 ಅಭ್ಯರ್ಥಿಗಳು ಕಣದಲ್ಲಿದ್ದಾರೆ.