ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
2021ರ ಡಿಸೆಂಬರ್ನಲ್ಲಿಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆಯನ್ನು ಸಿದ್ಧಪಡಿಸಲಾಗಿತ್ತು. ವಿಧಾನಸಭೆಯ ಒಪ್ಪಿಗೆ ದೊರಕಿದ್ದ ಮಸೂದೆಯನ್ನು ವಿಧಾನ ಪರಿಷತ್ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಈಗ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ.
ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಸುಗ್ರೀವಾಜ್ಞೆ ರೂಪದಲ್ಲಿ ಮತಾಂತರ ನಿಷೇಧ ಮಸೂದೆ ಜಾರಿಗೆ ಬರಲಿದೆ. ವಿಧಾನಮಂಡಲದ ಮುಂಬರುವ ಅಧಿವೇಶನದಲ್ಲಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ಪಡೆಯಲಾಗುವುದು ಎಂದರು