ಬೆಂಗಳೂರು: ರಾಜ್ಯದಲ್ಲೂ ಸಂಪೂರ್ಣವಾಗಿ ಪಟಾಕಿ ನಿಷೇಧಿಸಿ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.
ಯಾವುದೇ ರೀತಿಯ ಪಟಾಕಿಗಳನ್ನೂ ಮಾರಾಟ ಮಾಡಲು ಅವಕಾಶವಿಲ್ಲ. ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೂ ಆದೇಶ ಹೊರಡಿಸಲಾಗುವುದು ಎಂದು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಕೊರೊನಾ ಸೋಂಕು ಹರಡದಂತೆ ತಡೆಯಲು ಪಟಾಕಿ ನಿಷೇಧಿಸಿ ಆದೇಶ ಹೊರಡಿಸಲಾಗುತ್ತಿದೆ ಎಂದರು.
ರಾಜಸ್ಥಾನ, ಒಡಿಶಾ, ದೆಹಲಿ ಸೇರಿದಂತೆ ಹಲವು ರಾಜ್ಯಗಳು ಈಗಾಗಲೇ ಪಟಾಕಿ ನಿಷೇಧಿಸಲು ನಿರ್ಧರಿಸಿವೆ.
'ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ರಾಸಾಯನಿಕ ಹರಡಿ ಕೋವಿಡ್ ಹೆಚ್ಚಾಗುವ ಅಪಾಯ ಇದೆ ಎಂದು ತಜ್ಞರು ಸೂಚಿಸಿದ್ದಾರೆ. ಈ ಕುರಿತು ತಜ್ಞರ ವರದಿಯೊಂದನ್ನು ಪಡೆಯಲು ನಿರ್ಧರಿಸಲಾಗಿದೆ' ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಗುರುವಾರ ಹೇಳಿದ್ದರು.