ಬೆಂಗಳೂರು: ರಾಜ್ಯದಲ್ಲಿ ಕೋವಿಡ್–19 ಪರಿಸ್ಥಿತಿಗೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ತುರ್ತು ಸಭೆ ಕರೆದಿದ್ದಾರೆ.
ಕೊರೊನಾ ವೈರಸ್ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವುದರಿಂದ ಏಪ್ರಿಲ್ 18ರ ಬಳಿಕ ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಯಡಿಯೂರಪ್ಪ ಸೂಚನೆ ನೀಡಿದ್ದರು. ರಾಜ್ಯದ ಮತ್ತಷ್ಟು ಜಿಲ್ಲೆ ಮತ್ತು ನಗರಗಳಿಗೆ ರಾತ್ರಿ ಕರ್ಫ್ಯೂ ವಿಸ್ತರಿಸುವ ಸಲಹೆ ಪರಿಗಣಿಸುವ ಸಾಧ್ಯತೆ ಇದೆ. ಉಪಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ತೊಡಗಿದ್ದ ಸಿಎಂ, ಲಾಕ್ಡೌನ್ ಮಾಡುವ ನಿರ್ಧಾರ ಇಲ್ಲ ಎಂದಿದ್ದರು.
ಗುರುವಾರ ರಾಜ್ಯದಲ್ಲಿ 14,738 ಹೊಸ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವಿಗೀಡಾಗಿದ್ದಾರೆ. ಬೆಂಗಳೂರಿನಲ್ಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಪರಿಸ್ಥಿತಿ ನಿಯಂತ್ರಣಕ್ಕೆ ಕೈಗೊಳ್ಳುವ ಕ್ರಮಗಳ ಕುರಿತು ಗುರುವಾರ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, 'ಕೋವಿಡ್ ನಿಯಂತ್ರಿಸಲು ಬೇರೆ ರಾಜ್ಯಗಳು ತೆಗೆದುಕೊಂಡಿರುವ ಕಠಿಣ ಕ್ರಮಗಳ ಬಗ್ಗೆಯೂ ಪರಿಶೀಲನೆ ನಡೆಸಿದ್ದೇವೆ. ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಅಂದಾಜು, ಕೈಗೊಳ್ಳಬೇಕಾದ ನಿಯಂತ್ರಣಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿಯ ವರದಿ ಕುರಿತು ಮುಖ್ಯಮಂತ್ರಿ ಜೊತೆ ಚರ್ಚಿಸಿ, ಬಿಗಿ ಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ಧರಿಸಲಾಗುವುದು' ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.