ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಕೋವಿಡ್ ಪರೀಕ್ಷೆ, ಸೋಂಕಿತರ ಸಂಖ್ಯೆ ಇಳಿಕೆ

ರಾಜ್ಯದಲ್ಲಿ 403 ಮಂದಿ ಮೃತ: ಎಲ್ಲ ಜಿಲ್ಲೆಗಳಲ್ಲಿ ಮರಣ ಪ್ರಕರಣಗಳು ವರದಿ
Last Updated 16 ಮೇ 2021, 18:21 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ಪರೀಕ್ಷೆಗಳ ಸಂಖ್ಯೆ ಮತ್ತಷ್ಟು ಇಳಿಕೆ ಕಂಡಿದ್ದು, ಒಂದು ದಿನದ ಅವಧಿಯಲ್ಲಿ 1.13 ಲಕ್ಷ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ. ಈ ಅವಧಿಯಲ್ಲಿ 31,531 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ.

ಎರಡು ವಾರಗಳಿಂದ ಕೋವಿಡ್ ಪರೀಕ್ಷೆಗಳ ಸಂಖ್ಯೆಯು ಇಳಿಮುಖಮಾಡಿದೆ. ಇದೇ ವೇಳೆ 50 ಸಾವಿರದ ಗಡಿಯ ಆಸುಪಾಸಿನಲ್ಲಿದ್ದ ಸೋಂಕಿತ ಸಂಖ್ಯೆ ಕೂಡ ಕಡಿಮೆಯಾಗಿದೆ. ಶನಿವಾರ ಶೇ 35.20ಕ್ಕೆ ಏರಿಕೆಯಾಗಿದ್ದ ಸೋಂಕು ದೃಢ ಪ್ರಮಾಣ, ಭಾನುವಾರ ಶೇ 27.84ಕ್ಕೆ ಇಳಿಕೆಯಾಗಿದೆ. ಈ ತಿಂಗಳು 16 ದಿನಗಳಲ್ಲಿ 6.80 ಲಕ್ಷ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈವರೆಗೆ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 22 ಲಕ್ಷ ದಾಟಿದೆ.

ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 143 ಮಂದಿ ಸೇರಿದಂತೆ ರಾಜ್ಯದಲ್ಲಿ 403 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಮರಣ ಪ್ರಕರಣಗಳು ವರದಿಯಾಗಿವೆ. ಬಳ್ಳಾರಿಯಲ್ಲಿ 26 ಮಂದಿ, ಉತ್ತರ ಕನ್ನಡದಲ್ಲಿ 24 ಮಂದಿ, ಹಾಸನದಲ್ಲಿ 18 ಮಂದಿ, ಬೆಂಗಳೂರು ಗ್ರಾಮಾಂತರದಲ್ಲಿ 17 ಮಂದಿ, ಮಂಡ್ಯದಲ್ಲಿ 15 ಮಂದಿ, ಶಿವಮೊಗ್ಗದಲ್ಲಿ 14 ಮಂದಿ, ಹಾವೇರಿ, ಕೊಪ್ಪಳ ಮತ್ತು ತುಮಕೂರಿನಲ್ಲಿ ತಲಾ 11 ಮಂದಿ, ಕಲಬುರ್ಗಿಯಲ್ಲಿ 10 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 21,837ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಕೋವಿಡ್ ಪೀಡಿತರ ಸಂಖ್ಯೆ ಇಳಿಕೆ ಕಂಡಿದೆ. 8,344 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ತುಮಕೂರು (2,138), ಮೈಸೂರು (1,811), ಬೆಳಗಾವಿ (1,762), ಬಳ್ಳಾರಿ (1,729), ಹಾಸನ (1,182), ದಾವಣಗೆರೆ (1,155), ಉತ್ತರ ಕನ್ನಡ (1,087) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಆರು ಲಕ್ಷ ದಾಟಿದೆ. ಸೋಂಕಿತರಲ್ಲಿ 36,475 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 15.81 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT