ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ವಾರದಿಂದ ಸಾವಿರದ ಗಡಿಯೊಳಗೆ ಇದ್ದು, 789 ಮಂದಿ ಕೋವಿಡ್ ಪೀಡಿತರಾಗಿರುವುದು ಶುಕ್ರವಾರ ದೃಢಪಟ್ಟಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 29.71 ಲಕ್ಷ ದಾಟಿದೆ.
ಒಂದು ದಿನದ ಅವಧಿಯಲ್ಲಿ 1.35 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣವು ಶೇ 0.58 ರಷ್ಟು ವರದಿಯಾಗಿದೆ. 10 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 14 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿಯಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.
ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 108, ಮೈಸೂರಿನಲ್ಲಿ 71 ಹಾಗೂ ಕೊಡಗಿನಲ್ಲಿ 37 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 285 ಹಾಗೂ ಉಡುಪಿಯಲ್ಲಿ 69 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 50ರ ಗಡಿಯೊಳಗೆ ಇವೆ.
ಸೋಂಕಿತರಲ್ಲಿ 1,050 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.20 ಲಕ್ಷ ದಾಟಿದೆ. ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 13,306ಕ್ಕೆ ಇಳಿಕೆಯಾಗಿದೆ.
ಕೋವಿಡ್ ಪೀಡಿತರಲ್ಲಿ 23 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.