ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರಿಂದ ಶೇಕಡ 40ರಷ್ಟು ಲಂಚ ಪಡೆಯಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆಗಳೊಂದಿಗೆ ದೂರು ನೀಡಿದರೆ ತನಿಖೆ ನಡೆಸಿ, ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿವಿಧ ಇಲಾಖೆಗಳಲ್ಲಿ ಲಂಚದ ಹಾವಳಿ ನಿಂತಿಲ್ಲ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಮತ್ತೆ ಆರೋಪ ಮಾಡಿರುವ ಕುರಿತು ಸುದ್ದಿಗಾರರಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, 'ಸುಮ್ಮನೆ ಆರೋಪ ಮಾಡಿದರೆ ಸಾಲದು. ದಾಖಲೆಸಹಿತ ಅವರು ದೂರು ಕೊಡಲಿ' ಎಂದರು.
'ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹಿಂದೆಯೂ ಆರೋಪ ಮಾಡಿದ್ದರು. ಪ್ರಧಾನಿಯವರಿಗೂ ಪತ್ರ ಬರೆದಿದ್ದರು. ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಜತೆ ಸಭೆ ನಡೆಸಿ ಅವರ ಅಹವಾಲು ಆಲಿಸಿದ್ದೆ. ಅವರ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮಗಳನ್ನೂ ಕೈಗೊಂಡಿದ್ದೇನೆ' ಎಂದರು.
ಯಾವುದೇ ಆರೋಪ ಮಾಡಿದರೂ ಆಧಾರಗಳನ್ನು ಒದಗಿಸಬೇಕು. ದಾಖಲೆಗಳನ್ನು ನೀಡದೇ ಆರೋಪ ಮಾಡಿದರೆ ಕ್ರಮ ಜರುಗಿಸಲು ಹೇಗೆ ಸಾಧ್ಯ ಎಂದು ಮುಖ್ಯಮಂತ್ರಿ ಕೇಳಿದರು.