ಬೆಂಗಳೂರು: ‘ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಮುನಿರತ್ನ ಅವರ ಗೆಲುವನ್ನು ಅನೂರ್ಜಿತ ಎಂದು ಘೋಷಿಸಬೇಕು’ ಎಂಬ ಚುನಾವಣಾ ತಕರಾರು ಅರ್ಜಿಗೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಆರಂಭಿಸಿತು.
ಮುನಿರತ್ನ ವಿರುದ್ಧ ಪರಾಜಯಗೊಂಡಿದ್ದ ಅಂದಿನ ಬಿಜೆಪಿ ಅಭ್ಯರ್ಥಿ ಪಿ.ಎಂ. ಮುನಿರಾಜು ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದೆ.
‘ಜನತಾ ಪ್ರತಿನಿಧಿ ಕಾಯ್ದೆ–1951ರ ಕಲಂ 123ರ ಅನುಸಾರ ಪ್ರತಿವಾದಿಯ ಆಯ್ಕೆಯನ್ನು ಅನೂರ್ಜಿತ ಎಂದು ಸಾರ ಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.