ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆ: 6ನೇ ಸ್ಥಾನದಲ್ಲಿ ಕರ್ನಾಟಕ​

Last Updated 23 ಡಿಸೆಂಬರ್ 2020, 11:38 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯ 17 ಗುರಿಗಳ ಸಾಧನೆಯಲ್ಲಿ ದೇಶದಲ್ಲಿ ಕರ್ನಾಟಕ 6ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸಬೇಕಿದೆ’ ಎಂದು ಅಧಿಕಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ದೇಶನ ನೀಡಿದರು.

ಯೋಜನಾ ಇಲಾಖೆ ಸಿದ್ಧಪಡಿಸಿರುವ ‘ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ –2030’ರ ಕ್ರಿಯಾ ಯೋಜನೆಯನ್ನು ಬುಧವಾರ ಬಿಡುಗಡೆ ಮಾಡಿ ಅವರು ಮಾತನಾಡಿದರು.

‘ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ– 2030ರ ಕಾರ್ಯತಂತ್ರ ಮತ್ತು ಕ್ರಿಯಾ ಯೋಜನೆ ಮುಂದಿನ 10 ವರ್ಷಗಳ ಅವದಿಯಲ್ಲಿ ಸುಸ್ಥಿರ ಅಭಿವೃದ್ಧಿಪಥದಲ್ಲಿ ರಾಜ್ಯ ಮುನ್ನಡೆಯಲು ಪೂರಕವಾದ ಮಾರ್ಗಸೂಚಿಗಳನ್ನು ಒದಗಿಸಲಿದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ದೃಷ್ಟಿಕೋನವನ್ನು ಅನುಷ್ಠಾನಕ್ಕೆ ತರಲು ಇದು ಸಹಕಾರಿಯಾಗಲಿದೆ’ ಎಂದು ಮುಖ್ಯಮಂತ್ರಿ ಅಭಿಪ್ರಾಯಪಟ್ಟರು.

‘ರಾಜ್ಯದ ಎಲ್ಲ ಜನರಿಗೆ ಉತ್ತಮ ಜೀವನೋಪಾಯ, ಸ್ವಚ್ಛ ಪರಿಸರ, ಉತ್ತಮ ರೋಗ್ಯ, ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಇತ್ಯಾದಿ ಗುರಿಗಳನ್ನು ತಲುಪಲು ಈ ಕ್ರಿಯಾ ಯೋಜನೆ ಒತ್ತು ನೀಡುತ್ತದೆ. ಹೆಚ್ಚು ಸುಧಾರಣೆಯ ಅಗತ್ಯವಿರುವ ಪ್ರದೇಶ ಮತ್ತು ಕಾರ್ಯಕ್ರಮಗಳಿಗೆ ಮುಂದಿನ ಆಯವ್ಯಯದಲ್ಲಿ ಅಗತ್ಯ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ತಿಳಿಸಿದರು.

ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಮಾತನಾಡಿ, ‘ಕರ್ನಾಟಕಕ್ಕಿಂತ ಉತ್ತಮ ಶ್ರೇಯಾಂಕ ಹೊಂದಿರುವ ಕೇರಳ, ಗುಜರಾತ್ ಮತ್ತು ಇತರ ರಾಜ್ಯಗಳಿಗೆ ಭೇಟಿ ನೀಡಿದ್ದು, ಆ ರಾಜ್ಯಗಳಲ್ಲಿ ಸುಸ್ಥಿರ ಅಭಿವೃದ್ಧಿ ಗುರಿ – 2030 ಸಾಧನೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಲಾಗಿದೆ. ಅದರ ವಿವರಗಳನ್ನು ಯೋಜನಾ ಮಂಡಳಿಯ ಮುಂದಿನ ಸಭೆಯಲ್ಲಿ ಪ್ರಸ್ತುತಪಡಿಸಲಾಗುವುದು’ ಎಂದರು.

ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮಾತನಾಡಿ, ‘ಕೇಂದ್ರ ಸರ್ಕಾರದ ನೀತಿ ಆಯೋಗದ ಸೂಚನೆಯಂತೆ ಸುಸ್ಥಿರ ಅಭಿವೃದ್ಧಿಯ 17 ಗುರಿ ಸಾಧನೆಗೆ ನಿವೃತ್ತ ಮತ್ತು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಈ ಅಧಿಕಾರಿಗಳ ಸಮಿತಿಗಳು ಕಾರ್ಯಯೋಜನೆಗಳನ್ನು ರೂಪಿಸಿ ಸಲ್ಲಿಸಿದ್ದು, ಅವುಗಳನ್ನು ಆಯವ್ಯಯದಲ್ಲಿ ಅಳವಡಿಸುವ ಬಗ್ಗೆ ಆರ್ಥಿಕ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು’ ಎಂದು ವಿವರಿಸಿದರು.

ಯೋಜನಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಾತನಾಡಿ, ‘ನೀತಿ ಆಯೋಗ ಬಿಡುಗಡೆ ಮಾಡಿದ ಸುಸ್ಥಿರ ಅಭಿವೃದ್ಧಿ ಗುರಿಗಳ ಇಂಡಿಯಾ ಇಂಡೆಕ್ಸ್ ನಲ್ಲಿ ಕರ್ನಾಟಕ 66 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಕಡಿಮೆ ಅಂಕ ಪಡೆದಿರುವ ಗುರಿಗಳನ್ನು ಸಾಧಿಸಲು ಆದ್ಯತೆ ನೀಡುವ ಮೂಲಕ ಕರ್ನಾಟಕದ ಶ್ರೇಯಾಂಕವನ್ನು ಉತ್ತಮಪಡಿಸಬಹುದು’ ಎಂದು ವಿವರಿಸಿದರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತಿತರ ಹಿರಿಯ ಅಧಿಕಾರಿಗಳು ಇದ್ದರು. ಕ್ರಿಯಾ ಯೋಜನೆಯ ಸಂಪೂರ್ಣ ವಿವರಗಳಿಗೆ planning.karnataka.gov.in ಲಿಂಕ್‌ ಕ್ಲಿಕ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT