ಬೆಂಗಳೂರು: ಕರ್ನಾಟಕ ಲೇಖಕಿಯರ ಸಂಘ ನೀಡುವ 2020 ಮತ್ತು 2021ನೇ ಸಾಲಿನ ‘ವರ್ಷದ ಲೇಖಕಿ–ಅಂಕಿತ ಪುಸ್ತಕ ಪುರಸ್ಕಾರ’ ಪ್ರಕಟವಾಗಿದ್ದು, ಲೇಖಕಿಯರಾದ ಸಾಯಿಸುತೆ ಹಾಗೂ ರೇಖಾ ಕಾಖಂಡಕಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿಯು ತಲಾ ₹ 35 ಸಾವಿರ ನಗದು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.4ರಂದು ಬೆಂಗಳೂರಿನ ಎನ್.ಆರ್. ಕಾಲೋನಿಯ ಬಿ.ಎಂ.ಶ್ರೀ. ಪ್ರತಿಷ್ಠಾನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕವಿ ಜಯಂತ ಕಾಯ್ಕಿಣಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಡಾ.ಎಲ್.ಜಿ. ಮೀರಾ ಅವರು ಅಭಿನಂದನಾ ನುಡಿ ನುಡಿಯಲಿದ್ದಾರೆ. ಅಂಕಿತ ಪುಸ್ತಕದ ಪ್ರಕಾಶ್ ಕಂಬತ್ತಲ್ಲಿ ಉಪಸ್ಥಿತರಿರುತ್ತಾರೆ ಎಂದು ಸಂಘದ ಅಧ್ಯಕ್ಷೆ ವನಮಾಲಾ ಸಂಪನ್ನಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.