ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸದನದಲ್ಲಿ ನೀಡಿರುವ ಸಮರ್ಥನೆ ಹಾಸ್ಯಾಸ್ಪದವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಕುರಿತು ಪಕ್ಷದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ‘ಸದನದಲ್ಲಿ ಬೆಲೆ ಏರಿಕೆಯ ಬಗ್ಗೆ ಮುಖ್ಯಮಂತ್ರಿಗಳು ಮಾಡಿರುವ ಸಮರ್ಥನೆ ತೀರಾ ಹಾಸ್ಯಾಸ್ಪದವಾಗಿದೆ. ಅವರು ಬಿಜೆಪಿಯೇತರ ಹಿನ್ನೆಲೆಯಿಂದ ಬಂದವರಾದ್ದರಿಂದ ಸ್ವಲ್ಪವಾದರೂ ಪ್ರಬುದ್ಧತೆ ಇರುವ ನಿರೀಕ್ಷೆ ಇತ್ತು. ಆದರೆ ಬಿಜೆಪಿಯ ನೀರನ್ನು ಕುಡಿದು ಬಾಲಿಶವಾಗಿ ವರ್ತಿಸುತ್ತಿದ್ದಾರೆ! ಬಿಜೆಪಿಯ ವಾಟ್ಸ್ಆ್ಯಪ್ ವಿಶ್ವವಿದ್ಯಾಲಯದಲ್ಲಿ ಓದಿ ಬಂದು ಸದನದಲ್ಲಿ ಮಾತಾಡುತ್ತಿದ್ದಾರೆ!’ ಎಂದು ಟೀಕಿಸಲಾಗಿದೆ.
'ಬಿಜೆಪಿ ಸರ್ಕಾರ ದಿನನಿತ್ಯ ಜನ ಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ. ಜನರ ಬದುಕು ದುಸ್ಥಿತಿಗೆ ತಲುಪಿದೆ. ಯಾರಿಗೂ ಸಂಬಳ ಹೆಚ್ಚಾಗಿಲ್ಲ. ಪಿಂಚಣಿ ಹೆಚ್ಚಾಗಿಲ್ಲ. ಕೋವಿಡ್ ಸಂದರ್ಭದಲ್ಲಿ ಯಾರಿಗೂ ಪರಿಹಾರವೂ ಸಿಕ್ಕಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದರು. ಕಾಂಗ್ರೆಸ್ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿದ ಬಳಿಕ ಅವರು ಕೇಂದ್ರದ ವಿರುದ್ಧ ಹರಿಹಾಯ್ದಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.