ಬೆಂಗಳೂರು: ‘ರಾಜ್ಯದಲ್ಲಿ ಕೊರೊನಾದಿಂದ ಸಂಭವಿಸುತ್ತಿರುವ ಪ್ರತೀ ಸಾವು ಕೂಡ ಸರ್ಕಾರಿ ಪ್ರಾಯೋಜಿತ ಕೊಲೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಅವರು, ‘ಆಸ್ಪತ್ರೆಗಳಲ್ಲಿ ರೆಮ್ ಡೆಸಿವರ್ ಇಲ್ಲ, ಬೆಡ್ ಇಲ್ಲ, ಆ್ಯಕ್ಸಿಜನ್ ಇಲ್ಲ, ವೆಂಟಿಲೇಟರ್ ಇಲ್ಲ, ವ್ಯಾಕ್ಸಿನ್ ಕೊರತೆಯ ಸ್ಥಿತಿ ನಿರ್ಮಾಣವಾಗಿದೆ. ಜನರಿಗೆ ಕನಿಷ್ಠ ಚಿಕಿತ್ಸೆಯನ್ನೂ ನೀಡಲಾಗದ ಈ ಸರ್ಕಾರ ಯಾವ ಪುರುಷಾರ್ಥಕ್ಕೆ ಬೇಕು’ ಎಂದು ಪ್ರಶ್ನಿಸಿದ್ದಾರೆ.
‘ರಾಜ್ಯದಲ್ಲಿ ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಕೊರೊನಾ ಎರಡನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ ನಂತರವೂ ಸರ್ಕಾರ ಎಚ್ಚೆತ್ತುಕೊಳ್ಳದ ಪರಿಣಾಮ ಇವತ್ತು ರಾಜ್ಯದ ಆಸ್ಪತ್ರೆಗಳಲ್ಲಿ ಬೆಡ್ ಸಿಗದೇ, ಆ್ಯಕ್ಸಿಜನ್ ಇಲ್ಲದೇ ಜನ ಸಾಯುವಂತಹ ಪರಿಸ್ಥಿತಿ ನಿರ್ಮಾಣಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ’ ಎಂದು ದೂರಿದ್ದಾರೆ.
‘ಮೇ ತಿಂಗಳ ಅಂತ್ಯದ ವೇಳೆಗೆ ರಾಜ್ಯದಲ್ಲಿ ಕೊರೊನಾ ವೈರಸ್ನ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಮುಂದೆ ಎದುರಾಗಲಿರುವ ಭೀಕರ ಪರಿಸ್ಥಿತಿಗೆ ಸಜ್ಜಾಗಬೇಕಾದ ಸರ್ಕಾರ ಆಸ್ಪತ್ರೆಗಳಲ್ಲಿ ಬೆಡ್ ಹೆಚ್ಚಳ, ಆ್ಯಕ್ಸಿಜನ್, ವೆಂಟಿಲೇಟರ್ ವ್ಯವಸ್ಥೆ ಮಾಡುವುದು ಬಿಟ್ಟು, ಜನರ ಜೀವಗಳ ಜತೆ ಚೆಲ್ಲಾಟವಾಡುತ್ತಿದೆ’ ಎಂದಿದ್ದಾರೆ.
‘ಬೆಂಗಳೂರು ನಗರದಲ್ಲಂತೂ ಪರಿಸ್ಥಿತಿ ಕೈ ಮೀರಿ ಹೋಗಿದೆ ರೋಗಿಗಳು ಬೆಡ್ ಇಲ್ಲದೇ ಸಾಯುತ್ತಿದ್ದಾರೆ. ಆ್ಯಕ್ಸಿಜನ್ ಇಲ್ಲದೇ, ವೆಂಟಿಲೇಟರ್ ಇಲ್ಲದೇ ಸಾಯುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟಾದರೂ ಸರ್ಕಾರ ಏನೂ ಆಗೇ ಇಲ್ಲ, ಆ್ಯಕ್ಸಿಜನ್ ಕೊರತೆ ಇಲ್ಲ ಎಂದು ಭಂಡತನದ ಮಾತುಗಳನ್ನಾಡುತ್ತಿದೆ’ ಎಂದೂ ವಾಗ್ದಾಳಿ ನಡೆಸಿದ್ದಾರೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.