ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಸ್‌ಐ ಅಕ್ರಮ: ಮತ್ತೆ 8 ಅಭ್ಯರ್ಥಿಗಳ ಬಂಧನ

Last Updated 6 ಆಗಸ್ಟ್ 2022, 3:49 IST
ಅಕ್ಷರ ಗಾತ್ರ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಮತ್ತೆ ಎಂಟು ಮಂದಿ ಅಭ್ಯರ್ಥಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಹೈದರಾಬಾದ್ ಕರ್ನಾಟಕ ವೃಂದದಲ್ಲಿ ಪ್ರಥಮ ರ‍್ಯಾಂಕ್ ಪಡೆದಿದ್ದ ಜೇವರ್ಗಿಯ ಭಗವಂತರಾಯ ಜೋಗೂರ, ನಾಲ್ಕನೇ ರ‍್ಯಾಂಕ್ ಪಡೆದಿದ್ದ–ಪ್ರಸ್ತುತ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಆಗಿರುವ ಕಲ್ಲಪ್ಪ ಸಿದ್ದಪ್ಪ ಅಲ್ಲಾಪುರ, ರವಿರಾಜ, ಪೀರಪ್ಪ ಸಿದ್ನಾಳ, ಶ್ರೀಶೈಲ ಹಚ್ಚಡ, 22ನೇ ರ‍್ಯಾಂಕ್ ಪಡೆದಿದ್ದ ಅಫಜಲಪುರ ತಾಲ್ಲೂಕಿನ ಸಿದ್ದುಗೌಡ ಶರಣಪ್ಪ ಪಾಟೀಲ, ಸೋಮನಾಥ, ವಿಜಯಕುಮಾರ್ ಗುಡೂರ ಬಂಧಿತರು.

ಆರೋಪಿ ಸಿದ್ದುಗೌಡ ಪಾಟೀಲ ಪ್ರಕರಣದ ಕಿಂಗ್‌ಪಿನ್‌ ಆರ್.ಡಿ.ಪಾಟೀಲನ ಪತ್ನಿಯ ತಮ್ಮ. ಆತ ಯಾದಗಿರಿ ಜಿಲ್ಲೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ದರ್ಜೆ ಸಹಾಯಕ.

ಸಿಐಡಿ ಡಿವೈಎಸ್ಪಿಗಳಾದ ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ, ವೀರೇಂದ್ರಕುಮಾರ್, ಡಿಟೆಕ್ಟಿವ್ ವಿಭಾಗದ ಪಿಎಸ್‌ಐಗಳಾದ ಆನಂದ, ಯಶವಂತ, ಶಿವಪ್ರಸಾದ್ ನೆಲ್ಲೂರ ಅವರನ್ನು ಒಳಗೊಂಡ ತಂಡ ಬಂಧಿಸಿದೆ.

‌‌‌‘ಬಂಧಿತರ ಪೈಕಿ ರವಿರಾಜ, ಪೀರಪ್ಪ ಸಿದ್ನಾಳ ಮತ್ತು ಶ್ರೀಶೈಲ ಹಚ್ಚಡ ಕಲಬುರಗಿಯ ಶರಣಬಸವೇಶ್ವರ ಕಲಾ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದರೆ, ಸಿದ್ದುಗೌಡ ಪಾಟೀಲ ಶರಣಬಸವೇಶ್ವರ ವಿಜ್ಞಾನ ಕಾಲೇಜಿನ ಕೇಂದ್ರದಲ್ಲಿ ಮತ್ತು ಭಗವಂತರಾಯ ಜೋಗೂರ ಶರಣಬಸವೇಶ್ವರ ವಾಣಿಜ್ಯ ಕಾಲೇಜಿನಲ್ಲಿ ಪರೀಕ್ಷೆ ಬರೆದಿದ್ದರು. ಗೋದುತಾಯಿ ಎಂಜಿನಿಯರಿಂಗ್ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಸೋಮನಾಥ ಪರೀಕ್ಷೆಗೆ ಹಾಜರಾದರೆ, ಸರ್ಕಾರಿ ಪ್ರಥಮದರ್ಜೆ (ಸ್ವಾಯತ್ತ) ಕಾಲೇಜಿನಲ್ಲಿ ಕಲ್ಲಪ್ಪ ಅಲ್ಲಾಪುರ ಪರೀಕ್ಷೆ ಬರೆದಿದ್ದ. ಎಂ.ಎಸ್‌.ಇರಾನಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿವಿಜಯಕುಮಾರ್ ಗುಡೂರ ಪರೀಕ್ಷೆ ಬರೆದಿದ್ದ’ ಎಂದು ಮೂಲಗಳು ತಿಳಿಸಿವೆ.

‘ಈ ಅಭ್ಯರ್ಥಿಗಳು ಬ್ಲೂಟೂತ್ ಬಳಸಿ ಪಾಸಾಗಲು ಆರ್‌.ಡಿ.ಪಾಟೀಲ ನೆರವಾಗಿದ್ದ. ಇವರಿಂದ ಆರ್.ಡಿ.ಪಾಟೀಲ, ಇತರರು ಎಷ್ಟು ಹಣ ಪಡೆದಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT