ಬೆಂಗಳೂರು: ನಾನು ಜೆಡಿಎಸ್ ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಹೀಗಾಗಿ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತ ನೀಡಿದ್ದೇನೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.
ಮತ ಚಲಾಯಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಶಾಸಕನಾಗಿ ಆಯ್ಕೆಯಾದವನು ನಾನು. ಆ ಪಕ್ಷಕ್ಕೆ ಮತ ಚಲಾಯಿಸುವುದು ನನ್ನ ಧರ್ಮ. 1.25 ಲಕ್ಷ ಮತದಾರರ ಅಭಿಪ್ರಾಯವನ್ನು ಗೌರವಿಸಿ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸಿದ್ದೇನೆ ಎಂದರು.
ಮುಂದಿನ ರಾಜಕೀಯ ನಡೆ ಕುರಿತು ಇನ್ನೂ ನಿರ್ಧರಿಸಿಲ್ಲ. ಈಗಿನ ರಾಜಕೀಯ ವಾತಾವರಣ ಗಮನಿಸಿದರೆ ಚುನಾವಣೆಗೆ ಸ್ಪರ್ಧಿಸಬೇಕೆ? ಎಂಬ ಪ್ರಶ್ನೆ ಮೂಡುತ್ತದೆ. ತಾವಾಗಲೀ, ಮಗ ಹರೀಶ್ ಗೌಡ ಅವರಾಗಲೀ ಕ್ಷೇತ್ರದ ಕುರಿತು ಇನ್ನೂ ನಿರ್ಧರಿಸಿಲ್ಲ. ಜನರ ಅಭಿಪ್ರಾಯ ಆಧರಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.