ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಸಾಕ್ಷಿಯ ಮತ ಮನ್ಸೂರ್‌ಗೆ ಚಲಾಯಿಸಿ: ಜೆಡಿಎಸ್‌ ಶಾಸಕರಿಗೆ ಸಿದ್ದರಾಮಯ್ಯ ಪತ್ರ

Last Updated 9 ಜೂನ್ 2022, 7:41 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಸಭೆ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತವನ್ನು ಜಾತ್ಯತೀತತೆಗೆ ಬದ್ದವಾಗಿರುವ ನಮ್ಮ ಪಕ್ಷದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಅವರಿಗೆ ಚಲಾಯಿಸಬೇಕು’ ಎಂದು ಜೆಡಿಎಸ್‌ ಶಾಸಕರಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಜೆಡಿಎಸ್‌ ಶಾಸಕರನ್ನು ಉದ್ದೇಶಿಸಿ ಗುರುವಾರ ಬಹಿರಂಗ ಪತ್ರ ಬರೆದಿರುವ ಅವರು, ಜಾತ್ಯತೀತತೆಯ ಸಾವು-ಬದುಕಿನ ಪ್ರಶ್ನೆಯಾಗಿ ರಾಜ್ಯಸಭಾ ಚುನಾವಣೆ ನಮ್ಮ ಮುಂದಿದೆ. ಸೈದ್ದಾಂತಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಕಡೆ ಇದ್ದರೆ, ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಇನ್ನೊಂದು ಕಡೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಸೈದ್ದಾಂತಿಕ ಬದ್ದತೆಯಿಂದ ಜೆಡಿಎಸ್‌ ಬೆಂಬಲಿಸಿದರೆ ಈ ಯುವನಾಯಕನ ಆಯ್ಕೆ ನಿರಾತಂಕವಾಗಿ ನಡೆದುಹೋಗುತ್ತದೆ’ ಎಂದಿದ್ದಾರೆ.

ಪತ್ರ ಪೂರ್ಣ ರೂಪ ಇಲ್ಲಿದೆ:
‘ದೇಶ ಅತ್ಯಂತ ಆತಂಕಕಾರಿ ಹಾದಿಯಲ್ಲಿ ಸಾಗುತ್ತಿರುವುದು ನಮ್ಮೆಲ್ಲರ ಅರಿವಿನಲ್ಲಿದೆ. ಸಾಮಾಜಿಕ ನ್ಯಾಯ, ಸಮಾನತೆ,ಭಾತೃತ್ವ, ಜಾತ್ಯತೀತತೆ ಮೊದಲಾದ ಸಂವಿಧಾನದ ಆಶಯಗಳ ಮೇಲೆ ಪ್ರಭುತ್ವವೇ ನಡೆಸುತ್ತಿರುವ ನಿರಂತರ ದಾಳಿಯಿಂದ ದೇಶದ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಾಜಿಕ,ಶೈಕ್ಷಣಿಕ,ಆರ್ಥಿಕ ಕ್ಷೇತ್ರಗಳು ಸೇರಿದಂತೆ ಎಲ್ಲ ಬದಲಾವಣೆಗಳಿಗೂ ರಾಜಕೀಯ ಬದಲಾವಣೆಯೇ ಚಾಲನಾ ಶಕ್ತಿ ಎನ್ನುವುದು ನಾವು ಇತಿಹಾಸದಿಂದ ಕಲಿತ ಪಾಠವಾಗಿದೆ. ಕಲಿತ ಪಾಠವನ್ನು ಪ್ರಯೋಗಿಸುವ ಅವಕಾಶ ಎದುರಾದಾಗ ಮುಕ್ತ ಮನಸ್ಸಿನಿಂದ ತೊಡಗಿಸಿಕೊಳ್ಳುವುದು ಪ್ರತಿಯೊಬ್ಬ ಜವಾಬ್ದಾರಿಯುತ ಪ್ರಜೆಯ ಕರ್ತವ್ಯವಾಗಿದೆ.

ಇಂತಹದ್ದೊಂದು ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸುವ ಅವಕಾಶವನ್ನು ಇದೇ ಜೂನ್ 10ರಂದು ರಾಜ್ಯದಿಂದ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆ ನಮಗೆ ನೀಡಿದೆ. ಕಾಂಗ್ರೆಸ್ ಕೋಮುವಾದದ ಜೊತೆ ಎಂದೂ ರಾಜಿಯಾಗದೆ ಜಾತ್ಯತೀತತೆ ಪರವಾಗಿ ಗಟ್ಟಿಯಾಗಿ ನಿಂತಿರುವ ಪಕ್ಷ. ಕೋಮುವಾದಿ ಶಕ್ತಿಗಳನ್ನು ಸೋಲಿಸುವ ಪ್ರಸಂಗ ಎದುರಾದಾಗ ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರವನ್ನು ಲೆಕ್ಕಿಸದೆ ಜಾತ್ಯತೀತತೆ ಪರವಾಗಿ ಕಾಂಗ್ರೆಸ್ ಪಕ್ಷ ನಿಂತಿರುವುದಕ್ಕೆ ಇತಿಹಾಸ ಸಾಕ್ಷಿಯಾಗಿದೆ.

ಜಾತ್ಯತೀತ ಜನತಾದಳದ ಹಿರಿಯ ನಾಯಕ ಎಚ್.ಡಿ.ದೇವೇಗೌಡರಿಗೆ ಪ್ರಧಾನಿಯಾಗುವ ಅವಕಾಶ ಎದುರಾದಾಗ ಕಾಂಗ್ರೆಸ್ ಪಕ್ಷ ಮುಕ್ತ ಹೃದಯದಿಂದ ಬೆಂಬಲಿಸಿತ್ತು. ಎರಡು ವರ್ಷಗಳ ಹಿಂದೆ ಎಚ್.ಡಿ.ದೇವೇಗೌಡರು ರಾಜ್ಯಸಭಾ ಚುನಾವಣೆಯನ್ನು ಎದುರಿಸಿದಾಗ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ಗೌಡರನ್ನು ಬೆಂಬಲಿಸಿ ಗೆಲ್ಲಿಸಿತ್ತು. ನಾಲ್ಕು ವರ್ಷಗಳ ಹಿಂದೆ ಕೇವಲ 37 ಶಾಸಕರನ್ನು ಹೊಂದಿದ್ದ ಜಾತ್ಯತೀತ ಜನತಾದಳಕ್ಕೆ ನಮ್ಮ ಕಾಂಗ್ರೆಸ್ ಪಕ್ಷ ಬೆಂಬಲಿಸಿ ಎಚ್.ಡಿ.ಕುಮರಾಸ್ವಾಮಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಮಾಡಿತ್ತು. ಇದು ನಮ್ಮ ಸೈದ್ದಾಂತಿಕ ಬದ್ದತೆ.

ಈ ಬಾರಿ ರಾಜ್ಯಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಇದೇ ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ನಮ್ಮ ಎರಡನೇ ಅಭ್ಯರ್ಥಿಯನ್ನು ಬೆಂಬಲಿಸಿ ಗೆಲ್ಲಿಸಬಹುದು ಎಂಬ ನಿರೀಕ್ಷೆಯಿಂದ ನಮ್ಮ ಯುವನಾಯಕ ಮನ್ಸೂರ್ ಅಲಿ ಖಾನ್ ಅವರನ್ನು ಕಣಕ್ಕಿಳಿಸಿದ್ದೆವು. ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ ಮರುದಿನ ತಮ್ಮಲ್ಲಿ ಒಬ್ಬ ಅಭ್ಯರ್ಥಿಯನ್ನೂ ಗೆಲ್ಲಿಸುವಷ್ಟು ಮತಗಳು ಲಭ್ಯವಿಲ್ಲದೆ ಇದ್ದರೂ ಜೆಡಿಎಸ್ ಪಕ್ಷ, ಹಠಾತ್ತನೆ ತನ್ನ ಅಭ್ಯರ್ಥಿಯನ್ನು ಘೋಷಿಸಿರುವುದು ನಮಗೆ ಆಘಾತವುಂಟುಮಾಡಿದೆ.

ಈ ಚುನಾವಣೆ ಬಹುಮುಖ್ಯವಾಗಿ ಜಾತ್ಯತೀತತೆ ಮತ್ತು ಕೋಮುವಾದ ಎಂಬ ಎರಡು ಸಿದ್ದಾಂತಗಳ ನಡುವಿನ ಸಮರವೂ ಆಗಿದೆ ಎನ್ನುವುದನ್ನು ನೀವು ಬಲ್ಲಿರಿ. ರಾಷ್ಟ್ರಕವಿ ಕುವೆಂಪು ಅವರು ಹೆಮ್ಮೆಯಿಂದ ಹೇಳಿಕೊಂಡ ಸರ್ವಜನಾಂಗದ ಶಾಂತಿಯ ತೋಟವನ್ನು ಬಿಜೆಪಿ, ಧಾರ್ಮಿಕ ದ್ವೇಷಾಸೂಯೆಗಳಿಂದ ಹಾಳುಗೆಡಹುತ್ತಿರುವುದನ್ನು ನಾವು ನಿತ್ಯ ನೋಡುತ್ತಿದ್ದೇವೆ. ಪಠ್ಯಪುಸ್ತಕ ಪರಿಷ್ಕರಣೆಯ ನೆಪದಲ್ಲಿ ಬಸವಣ್ಣ, ಅಂಬೇಡ್ಕರ್, ನಾರಾಯಣ ಗುರು, ನಾಡಪ್ರಭು ಕೆಂಪೇಗೌಡ, ಕುವೆಂಪು ಸೇರಿದಂತೆ ನಾವು ಗೌರವಿಸುವ ಮಹಾಪುರುಷರಿಗೆ ಮಾಡಿರುವ ಅವಮಾನ ಇದಕ್ಕೆ ಇತ್ತೀಚಿನ ಜ್ವಲಂತ ಉದಾಹರಣೆ.

ಕನ್ನಡಿಗರೆಲ್ಲರ ಆತ್ಮಸ್ವರೂಪಿಯಾದ ಕುವೆಂಪು ವಿರಚಿತ ನಾಡಗೀತೆಯನ್ನೇ ತಿರುಚಿದ ಕಿಡಿಗೇಡಿಯಿಂದಲೇ ಈ ಎಲ್ಲ ದುಷ್ಕತ್ಯಗಳನ್ನು ಮಾಡಿಸುವ ಧಾರ್ಷ್ಟ್ಯವನ್ನು ಬಿಜೆಪಿ ತೋರಿದೆ. ರಾಜ್ಯಸಭಾ ಚುನಾವಣೆಯ ಮೂಲಕ ಒದಗಿ ಬಂದ ಅವಕಾಶವನ್ನು ಬಳಸಿಕೊಂಡು ಕೋಮುವಾದಿ ಮತ್ತು ಜಾತಿವಾದಿ ಬಿಜೆಪಿಗೆ ತಕ್ಕ ಉತ್ತರ ನೀಡಬೇಕೆಂದು ಜಾತ್ಯತೀತತೆ,ಸೌಹಾರ್ದತೆ ಮತ್ತು ಸಹಬಾಳ್ವೆಯ ಮೇಲೆ ನಂಬಿಕೆ ಇಟ್ಟಿರುವ ನಾಡಬಾಂಧವರೆಲ್ಲರ ಮನದಾಳದ ಹಾರೈಕೆಯಾಗಿದೆ.

ಜಾತ್ಯತೀತತೆಯ ಸಾವು-ಬದುಕಿನ ಪ್ರಶ್ನೆಯಾಗಿ ರಾಜ್ಯಸಭಾ ಚುನಾವಣೆ ನಮ್ಮ ಮುಂದಿದೆ. ಸೈದ್ದಾಂತಿಕವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಂದು ಕಡೆ ಇದ್ದರೆ, ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಇನ್ನೊಂದು ಕಡೆ ಇದೆ. ಈ ಹಿನ್ನೆಲೆಯಲ್ಲಿ ನಮ್ಮ ಎರಡನೇ ಅಭ್ಯರ್ಥಿಯಾಗಿರುವ ಮನ್ಸೂರ್ ಅಲಿ ಖಾನ್ ಅವರ ಸೋಲು-ಗೆಲುವನ್ನು ರಾಜ್ಯದ ಅಲ್ಪಸಂಖ್ಯಾತ ಸಮುದಾಯ ಮಾತ್ರವಲ್ಲ ಜಾತ್ಯತೀತತೆಯ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕುತೂಹಲದಿಂದ ಗಮನಿಸುತ್ತಿದ್ದಾರೆ. ಸೈದ್ದಾಂತಿಕ ಬದ್ದತೆಯಿಂದ ಜಾತ್ಯತೀತ ಜನತಾದಳ ಬೆಂಬಲಿಸಿದರೆ ಈ ಯುವನಾಯಕನ ಆಯ್ಕೆ ನಿರಾತಂಕವಾಗಿ ನಡೆದುಹೋಗುತ್ತದೆ.

ಮನ್ಸೂರು ಅಲಿ ಖಾನ್ ಅವರ ಗೆಲುವು ಯಾವುದೇ ಒಂದು ಪಕ್ಷದ ಗೆಲುವಾಗದೆ ಜಾತ್ಯತೀತ ಸಿದ್ದಾಂತದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಮತ್ತು ಜಾತ್ಯತೀತ ಜನತಾದಳ ಪಕ್ಷಗಳೆರಡರ ಸೈದ್ದಾಂತಿಕ ಗೆಲುವಾಗುತ್ತದೆ. ಪ್ರಜಾಪ್ರತಿನಿಧಿಗಳಾದ ನಾವೆಲ್ಲರೂ ನಮ್ಮ ಪ್ರಭುಗಳಾದ ಪ್ರಜೆಗಳ ಆತ್ಮಸಾಕ್ಷಿಗೆ ದನಿಯಾಗಬೇಕಾಗಿರುವುದು ಕರ್ತವ್ಯವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT