ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.1ರಿಂದ ತರಗತಿ: ಶಾಲೆ–ಕಾಲೇಜುಗಳಲ್ಲಿ ಸಿದ್ಧತೆ ಪರಿಶೀಲಿಸಿದ ಸಚಿವ ಸುರೇಶ್ ಕುಮಾರ್

ಜ.1ರಿಂದ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ತರಗತಿ ಆರಂಭ
Last Updated 30 ಡಿಸೆಂಬರ್ 2020, 8:56 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಮಾರ್ಗದರ್ಶನದಂತೆ ಶಿಕ್ಷಣ ಇಲಾಖೆ ರೂಪಿಸಿದ ಎಸ್ಒಪಿ ಆಧರಿಸಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿ ಜ.1ರಿಂದ ಆರಂಭವಾಗುತ್ತಿರುವುದರಿಂದ ಶಾಲಾಕಾಲೇಜುಗಳಲ್ಲಿನ ಪೂರ್ವ ಸಿದ್ಧತೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪರಿಶೀಲಿಸಿದರು.

ನಗರದ ವಿವಿಧ ಸರ್ಕಾರಿ ಹಾಗೂ ಖಾಸಗಿ ಪದವಿ ಪೂರ್ವ ಕಾಲೇಜು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ ಬುಧವಾರ ಭೇಟಿ ನೀಡಿ ಸಿದ್ಧತೆಗಳನ್ನು ಅವಲೋಕಿಸಿದರು. ಶಾಲೆಯಲ್ಲಿ ಹಾಜರಿದ್ದ ಮುಖ್ಯೋಪಾಧ್ಯಾಯರು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕರ ಜೊತೆ ತರಗತಿಗಳನ್ನು ಆರಂಭಿಸುವಾಗ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ವಿವರಿಸಿದರು.

ಮೊದಲ ದಿನದ ಮೊದಲ ತರಗತಿ ಅವಧಿಯಲ್ಲಿ ಕೊರೊನಾ ಕುರಿತು ಮುನ್ನೆಚ್ಚರಿಕೆ ಕ್ರಮಗಳು, ಪಾಲಿಸಬೇಕಾದ ನಿಯಮಗಳು ಮತ್ತು ವಿಶೇಷವಾಗಿ ತರಗತಿ ಆರಂಭಿಸಿರುವ ಮಹತ್ವ ಮತ್ತು ಈ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳೊಂದಿಗೆ ಉತ್ತೀರ್ಣರಾಗಬೇಕಾದ ಬಗ್ಗೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು ಎಂದು ಸಚಿವರು ಸಲಹೆ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಮತ್ತು ಕಾಲೇಜುಗಳಲ್ಲೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊರತೆಯಿಲ್ಲ. ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲಾಕಾಲೇಜುಗಳಿಂದ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತರು ಹೊರಬರುತ್ತಿದ್ದಾರೆ. ಅನೇಕ ಕೊರತೆಗಳ ಮಧ್ಯೆಯೂ ಸರ್ಕಾರಿ ಶಾಲೆಗಳಲ್ಲಿ ಅಭ್ಯಸಿರುವ ಅನೇಕ ವಿದ್ಯಾರ್ಥಿಗಳು ಉನ್ನತ ಮಟ್ಟಕ್ಕೆ ಏರಿದ್ದಾರೆ. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 97-98 ಅಂಕಗಳೊಂದಿಗೆ ಉತ್ತೀರ್ಣರಾದ ಸರ್ಕಾರಿ ಶಾಲೆಯ ಮಕ್ಕಳಾದ ಬೆಂಗಳೂರಿನ ಯಾದಗಿರಿಯ ವಲಸೆ ವಿದ್ಯಾರ್ಥಿ ಮತ್ತು ವಿಜಯಪುರದ ಸಾವಳಗಿ ಸೇರಿದಂತೆ ಅನೇಕ ವಿದ್ಯಾರ್ಥಿಗಳ ಪರಿಶ್ರಮವನ್ನು ಉದಾಹರಣೆ ನೀಡಿದ ಸಚಿವರು, ಈ ಕುರಿತು ವಿದ್ಯಾರ್ಥಿಗಳ ಗಮನಕ್ಕೆ ತಂದು ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ತಾವೂ ಸಹ ಅದೇ ರೀತಿ ಹೆಚ್ಚಿನ ಅಂಕಗಳನ್ನು ಪಡೆಯಬೇಕೆಂಬ ಹುಮ್ಮಸ್ಸು, ಆಸಕ್ತಿ ಮೂಡುವಂತೆ ಪ್ರೇರೇಪಿಸಬೇಕೆಂದು ಸಲಹೆ ನೀಡಿದರು.

ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಕೈತೊಳೆಯಲು ಸ್ಯಾನಿಟೈಸರ್ ಅಥವಾ ಸಾಬೂನು ಬಳಸುವುದು, ಉಪಾಧ್ಯಾಯರು ಕೋವಿಡ್ ಪರೀಕ್ಷೆ ಫಲಿತಾಂಶದೊಂದಿಗೆ ಬರುವುದು, ಫೇಸ್ ಮಾಸ್ಕ್‌ ಮತ್ತು ಫೇಸ್ ಶೀಲ್ಡ್ ಧರಿಸುವುದು, ಮಕ್ಕಳ ಶಾರೀರಿಕ‌ ಅಂತರವನ್ನು ಉಳಿಸಿಕೊಳ್ಳುವಲ್ಲಿ ಗಮನ ಹರಿಸುವುದು, ಅವರ ಆರೋಗ್ಯ, ರೋಗಲಕ್ಷಣಗಳ ಕುರಿತು ಗಮನ ಹರಿಸುವುದು, ತರಗತಿ ಕೊಠಡಿಯಲ್ಲಿ ಚಿಕ್ಕ ಸಂಖ್ಯೆಯ ಮಕ್ಕಳನ್ನು ಅಂತರದಲ್ಲಿ ಕೂರಿಸುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದೂ ಹೇಳಿದರು.

ಶಾಲೆ ಮುಗಿದ ಬಳಿಕ ಶಾಲಾವರಣ, ತರಗತಿ ಕೊಠಡಿ ಮತ್ತು ಶೌಚಾಲಯಗಳನ್ನು ಸ್ಯಾನಿಟೈಸರ್ ಮಾಡುವುದನ್ನು ಮರೆಯದೇ ಪಾಲಿಸಬೇಕಿದೆ. ಈಗಾಗಲೇ ಹೆಚ್ಚಿನ ದಿನಗಳು ಮುಗಿದಿರುವುದರಿಂದ ಉಪನ್ಯಾಸಕರು ಇಲಾಖೆ ನಿಗದಿಪಡಿಸುವ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಕ್ರಮ ವಹಿಸಬೇಕು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿಗದಿತ ಅವಧಿಯೊಳಗೆ ಪಠ್ಯ ಮುಗಿಸುವುದರತ್ತ ಗಮನ ಹರಿಸಬೇಕು. ಕಳೆದ ವರ್ಷದ ಬಸ್ ಪಾಸುಗಳನ್ನೇ ಬಳಸಲು ಅವಕಾಶವಿರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದಿಲ್ಲ ಎಂಬುದನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಬೇಕೆಂದು ಹೇಳಿದರು.

ಮಕ್ಕಳನ್ನು ಶಾಲೆಗೆ ಕಳಿಸುವ ಪೋಷಕರು ಉತ್ಸುಕರಾಗಿದ್ದು, ಪ್ರಥಮ ಪಿಯುಸಿ ತರಗತಿಗಳನ್ನೂ ಆರಂಭಿಸಬೇಕೆಂದು ಒತ್ತಾಯಿಸುತ್ತಿದ್ದಾರೆಂದು ಉಪನ್ಯಾಸಕರು, ವಿದ್ಯಾರ್ಥಿಗಳು ಮತ್ತು ಪೋಷಕರ ಮನಸ್ಥಿತಿಯನ್ನು ಸಚಿವರ ಗಮನಕ್ಕೆ ತಂದಾಗ, ಪರಿಸ್ಥಿತಿಯನ್ನು ಅವಲೋಕಿಸಿ ಈ ಕುರಿತು ಕೆಲವು ದಿನಗಳ ನಂತರ ನಿರ್ಧಾರಕ್ಕೆ ಬರಲಾಗುವುದು ಎಂದು ಸಚಿವರು ಹೇಳಿದರು.

ಶಾಲೆಗಳ 10ನೇ ತರಗತಿ ಮತ್ತು ಪದವಿ ಪೂರ್ವ ಕಾಲೇಜುಗಳ ದ್ವಿತೀಯ ಪಿಯು ವಿದ್ಯಾರ್ಥಿಗಳ ಸಂಖ್ಯೆಯನ್ನು ವಿಚಾರಿಸಿ ಎಷ್ಟು ತಂಡಗಳು ಮತ್ತು ಎಷ್ಟು ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ ಎಂಬುದನ್ನು ಗಮನಿಸಿ ತರಗತಿ ಕೊಠಡಿಗಳನ್ನು ಪರಿಶೀಲಿಸಿದರು.

ಮಲ್ಲೇಶ್ವರಂ 18ನೇ ಕ್ರಾಸ್, ಯಲಹಂಕದ ಸರ್ಕಾರಿ ಪದವಿ ಪೂರ್ವ ಕಾಲೇಜು, ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಬಿಇಎಸ್ ಪದವಿ ಪೂರ್ವ ಕಾಲೇಜು ಸೇರಿದಂತೆ ಹೆಬ್ಬಾಳ, ಮಲ್ಲೇಶ್ವರಂ ಮತ್ತಿತರ ಕಡೆಯ ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ರಾಜ್ಯದ ವಿವಿಧೆಡೆ ಕೈಗೊಳ್ಳಲಾಗಿರುವ ಸಿದ್ಧತೆಗಳ ಕುರಿತು ಡಿಡಿಪಿಐ, ಡಿಡಿಪಿಯು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಂದ ದೂರವಾಣಿ ಮೂಲಕ ಮಾಹಿತಿ ಪಡೆದು, ಅಗತ್ಯ ಸಲಹೆ, ಸೂಚನೆಗಳನ್ನು ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT