ಬೆಂಗಳೂರು: ‘ಅಪೌಷ್ಟಿಕತೆಯಿಂದ ತಾಯಿ, ಮಕ್ಕಳು ಸಾವಿಗೀಡಾಗುತ್ತಿರುವುದನ್ನು ತಪ್ಪಿಸಲು ಕೇಂದ್ರ ಸರ್ಕಾರ ಆರಂಭಿಸಿರುವ ರಾಷ್ಟ್ರೀಯ ಪೋಷಣ್ ಅಭಿಯಾನದ ಅನುದಾನದ ಬಳಕೆ ಹಾಗೂ ಒಟ್ಟು ಸಾಧನೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಜೊತೆಗೆ ಗುರುವಾರ ವಿಡಿಯೊ ಸಂವಾದ ಮೂಲಕ ರಾಜ್ಯದಲ್ಲಿ ಪೋಷಣ್ ಅಭಿಯಾನದ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ಮುಂದಿನ ತ್ರೈಮಾಸಿಕ ಸಭೆಯ ವೇಳೆಗೆ ಈ ಅಭಿಯಾನದಲ್ಲಿ ರಾಜ್ಯ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಪೋಷಣ್ ಅಭಿಯಾನದ ಟ್ರ್ಯಾಕರ್ ಅಳವಡಿಕೆ, ಸಮುದಾಯ ಆಧಾರಿತ ಕಾರ್ಯಕ್ರಮಗಳು, ತರಬೇತಿ ಕುರಿತಂತೆ ಅಧಿಕಾರಿಗಳಿಂದ ಸಚಿವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರಿಗೆ ನೀಡಿರುವ ಸ್ಮಾರ್ಟ್ ಫೋನ್ ಸಮಸ್ಯೆ ಕುರಿತು ಸಚಿವರ ಗಮನಕ್ಕೆ ತಂದರು.
ಎದುರಾಗುತ್ತಿರುವ ಸಮಸ್ಯೆಗಳ ಬಗ್ಗೆ ಲಿಖಿತವಾಗಿ ಆಯುಕ್ತರಿಗೆ ಮಾಹಿತಿ ನೀಡಿದರೆ, ಸಂಬಂಧಪಟ್ಟ ಕಂಪನಿಗಳ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಜೊಲ್ಲೆ ಭರವಸೆ ನೀಡಿದರು.