ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ಮಾರ್ಗ, ಹೆದ್ದಾರಿ ಯೋಜನೆ: ಕೇರಳ ಸರ್ಕಾರದ ಬೇಡಿಕೆ ತಿರಸ್ಕರಿಸಿದ ಬೊಮ್ಮಾಯಿ

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಕಾಮಗಾರಿ ಸಾಧ್ಯವಿಲ್ಲ: ಸಿ.ಎಂ
Last Updated 18 ಸೆಪ್ಟೆಂಬರ್ 2022, 19:54 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿನ ಪರಿಸರ ಸೂಕ್ಷ್ಮ ಪ್ರದೇಶಗಳು, ವನ್ಯಜೀವಿ ಧಾಮಗಳಲ್ಲಿ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ,ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಸೇರಿ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರದ ಬೇಡಿಕೆಗಳನ್ನು ತಿರಸ್ಕರಿಸಲಾಗಿದೆ’ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇತ್ತೀಚೆಗೆ ನಡೆದ ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಬಂದಿದ್ದ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜತೆ ಭಾನುವಾರ ಗೃಹ ಕಚೇರಿ ‘ಕೃಷ್ಣಾ’ ದಲ್ಲಿ ಚರ್ಚೆ ನಡೆಸಿದ ಬಳಿಕ ಬೊಮ್ಮಾಯಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

‘ಉದ್ದೇಶಿತ ಕಾಞಂಗಾಡ್ – ಕಾಣಿಯೂರು ರೈಲು ಮಾರ್ಗ ಕೇರಳದಲ್ಲಿ 40 ಕಿ.ಮೀ., ಕರ್ನಾಟಕದಲ್ಲಿ 31 ಕಿ.ಮೀ. ಮಾರ್ಗ ಹೊಂದಿದೆ. ಇದರಿಂದ ಕರ್ನಾಟಕಕ್ಕೆ ಹೆಚ್ಚಿನ ಅನುಕೂಲಗಳಿಲ್ಲ. ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿ ಈ ಮಾರ್ಗ ಹಾದುಹೋಗಲಿದ್ದು, ಒಪ್ಪಿಗೆ ನೀಡಲಾಗದು ಎಂದು ಸ್ಪಷ್ಟಪಡಿಸಲಾಗಿದೆ’ ಎಂದರು.

‘ಹಳೆಯ ಯೋಜನೆಯಾದ ತಲಚೇರಿ- ಮೈಸೂರು ರೈಲು ಯೋಜನೆ ಕೂಡಾ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ನಡುವೆ ಹಾದು
ಹೋಗಲಿದೆ. ಅಲ್ಲಿನ ವನ್ಯಜೀವಿ ಸಂಪತ್ತು ಹಾಗೂ ಅರಣ್ಯ ಸಂಪತ್ತಿಗೆ ಹಾನಿಯಾಗಲಿದೆ. ಹೀಗಾಗಿ, ಇದಕ್ಕೂ ಒಪ್ಪಿಗೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಲಾ
ಗಿದೆ. ಆಗ ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸಿ.ಎಂ ಪ್ರಸ್ತಾಪಿಸಿದರು. ಆದರೆ, ಇದರಿಂದಲೂ ಪರಿಸರಕ್ಕೆ ಹಾನಿಯಾಗಲಿದೆ. ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲವೆಂದು ತಿಳಿಸಲಾಗಿದೆ’ ಎಂದರು.

‘ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲಕ ಕೇರಳಕ್ಕೆ ರಾತ್ರಿ ವೇಳೆ ಎರಡು ಬಸ್‌ಗಳು ಸಂಚರಿಸುತ್ತಿವೆ. ಇನ್ನೂ ಎರಡು ಬಸ್‌ಗಳ ಸಂಚಾರಕ್ಕೆ ಅನುಮತಿ ನೀಡುವಂತೆ ಕೇರಳ ಕೋರಿಕೆ ಸಲ್ಲಿಸಿದೆ. ಅದಕ್ಕೂ ಸರ್ಕಾರ ಒಪ್ಪಿಗೆ ನೀಡಿಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT