ಬೆಂಗಳೂರು: ಮಂಗನ ಕಾಯಿಲೆ ಹರಡದಂತೆ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಶಿವಮೊಗ್ಗದ ವಕೀಲರಾದ ಕೆ.ಪಿ.ಶ್ರೀಪಾಲ್ ಮತ್ತು ಎನ್.ಜಿ. ರಮೇಶಪ್ಪ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠವಿಚಾರಣೆ ನಡೆಸಿತು.
‘ಮಂಗನ ಕಾಯಿಲೆ ಮೂರು ಜಿಲ್ಲೆಗಳಿಗೆ ಹರಡಿದೆ. ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಯಲ್ಲಿ ಕಳೆದ ವರ್ಷ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಒಂದು ವರ್ಷದಲ್ಲಿ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಗಳ 15 ಮಂದಿ ಮೃತಪಟ್ಟಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ಹೇಳಿದರು.
‘ಈ ಸಂಬಂಧ ರಾಜ್ಯ ಸರ್ಕಾರ ಈಗಾಗಲೇ ಅಫಿಡವಿಟ್ ಸಲ್ಲಿಸಿದೆ.2020ರಲ್ಲಿ ಈ ರೋಗ ನಿಭಾಯಿಸಲು ಏನು ಕ್ರಮ ವಹಿಸಲಾಗಿದೆ ಎಂಬುದರ ಕುರಿತು ಮತ್ತೊಂದು ಅಫಿಡವಿಟ್ ಸಲ್ಲಿಸಿ’ ಎಂದು ಪೀಠ ಸರ್ಕಾರಕ್ಕೆ ತಿಳಿಸಿತು.