ಬೆಂಗಳೂರು: ಸಾರಿಗೆ ನಿಗಮಗಳ ನೌಕರರ ಮುಷ್ಕರ ಶನಿವಾರವೂ ಮುಂದುವರಿಯಲಿದೆ. ಗುರಿ ಮುಟ್ಟುವವರೆಗೂ ಹೋರಾಟ ನಡೆಯಲಿದೆ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ಶುಕ್ರವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಹೆಚ್ಚಳ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇದಕ್ಕೆ ವೈಜ್ಞಾನಿಕ ಕಾರಣ ನೀಡಬೇಕು’ ಎಂದು ಆಗ್ರಹಿಸಿದರು.
ಶನಿವಾರ ಬೆಳಗಾವಿಯಲ್ಲಿ ಸಾರಿಗೆ ನೌಕರರ ಸಭೆ ನಡೆಯಲಿದೆ. ನಂತರ ಕಲಬುರ್ಗಿಯಲ್ಲಿ ಸಭೆ ನಡೆಸಲಾಗುವುದು. ಯುಗಾದಿ ಹಬ್ಬದ ದಿನ ಎಲ್ಲ ಕಡೆಗಳಲ್ಲಿ ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ಗಳ ಮೂಲಕ ಸಾರಿಗೆ ನೌಕರರ ಕುಟುಂಬದವರು ಸರ್ಕಾರಕ್ಕೆ ಮನವಿ ಪತ್ರಗಳನ್ನು ಸಲ್ಲಿಸಲಿದ್ದಾರೆ ಎಂದರು.
ಸಾರಿಗೆ ನಿಗಮಗಳ ನೌಕರರಿಗೆ ಮಾರ್ಚ್ ತಿಂಗಳ ವೇತನ ನೀಡಿಲ್ಲ. ಯುಗಾದಿ ಹಬ್ಬದ ಬೋನಸ್ ಕೂಡ ನಿರಾಕರಿಸಲಾಗಿದೆ. ಯುಗಾದಿ ಹಬ್ಬ ಸಾರಿಗೆ ನೌಕರರಿಗೆ ಕಹಿ ತಂದಿದೆ. ಹಬ್ಬದ ದಿನ ನೌಕರರು ತಟ್ಟೆ, ಲೋಟ ಬಡಿದು ಪ್ರತಿಭಟನೆ ನಡೆಸಲಿದ್ದಾರೆ ಎಂದರು.