ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅ.28ರಂದು ‘ಕೋಟಿ ಕಂಠ’ದಲ್ಲಿ ಗಾಯನ- ವಿಶ್ವದೆಲ್ಲೆಡೆ ಮೊಳಗಲಿವೆ ಐದು ಕನ್ನಡ ಗೀತೆ

Last Updated 6 ಅಕ್ಟೋಬರ್ 2022, 21:12 IST
ಅಕ್ಷರ ಗಾತ್ರ

ಬೆಂಗಳೂರು: ಕಳೆದ ವರ್ಷ ‘ಮಾತಾಡ್‌ ಮಾತಾಡ್‌ ಕನ್ನಡ’ ಘೋಷ ವಾಕ್ಯದೊಂದಿಗೆ ಏರ್ಪಡಿಸಿದ್ದ ‘ಲಕ್ಷ ಕಂಠ’ ಗಾಯನ ಯಶಸ್ವಿಯಾಗಿದ್ದ ಹಿನ್ನೆಲೆಯಲ್ಲಿ ಇದೇ 28 ರಂದು ಏಕಕಾಲದಲ್ಲಿ ರಾಜ್ಯದಾದ್ಯಂತ ಕನ್ನಡದ ಕವಿಗಳ ಜನಪ್ರಿಯ ಗೀತೆಗಳ ಕೋಟಿ ಕಂಠ ಗಾಯನವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದೆ.

ರಾಜ್ಯೋತ್ಸವ ಪ್ರಯುಕ್ತ ಏರ್ಪಡಿಸಿರುವ ಈ ಕಾರ್ಯಕ್ರಮದಲ್ಲಿ ಕರ್ನಾಟಕವಲ್ಲದೇ, ಅನಿವಾಸಿ ಕನ್ನಡಿಗರು, ಹೊರನಾಡ ಮತ್ತು ಗಡಿನಾಡ ಕನ್ನಡಿಗರೂ ಭಾಗವಹಿಸಲಿದ್ದಾರೆ. ವಿಶ್ವದಾದ್ಯಂತ ಕನ್ನಡದ ಕಂಪನ್ನು ಪಸರಿಸುವ ವಿನೂತನ ಕಾರ್ಯಕ್ರಮ ಇದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್ ಅವರು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಈ ಬಾರಿ ಒಟ್ಟು ಐದು ಗೀತೆಗಳನ್ನು ಗಾಯನಕ್ಕಾಗಿ ಆಯ್ಕೆ ಮಾಡಲಾಗಿದೆ. ಕುವೆಂಪು ವಿರಚಿತ ನಾಡಗೀತೆ ‘ಜಯಭಾರತ ಜನನಿಯ ತನುಜಾತೆ’ ಹಾಗೂ ‘ಬಾರಿಸು ಕನ್ನಡ ಡಿಂಡಿಮವ’, ಡಾ. ಚೆನ್ನವೀರ ಕಣವಿ ಅವರ ‘ವಿಶ್ವವಿನೂತನ ವಿದ್ಯಾಚೇತನ ಸರ್ವ ಹೃದಯ ಸಂಸ್ಕಾರಿ’,
ಡಾ.ಡಿ.ಎಸ್‌.ಕರ್ಕಿ ಅವರ ‘ಹಚ್ಚೇವು ಕನ್ನಡದ ದೀಪ’, ಹಂಸಲೇಖ ಅವರ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಗೀತೆಗಳನ್ನು ಹಾಡಲಾಗುವುದು. ಈ ಐದು ಗೀತೆಗಳಲ್ಲದೇ, ಆಸಕ್ತರು ಬೇರೆ ಕನ್ನಡ ಗೀತೆಗಳನ್ನು ಸಮಯದಮಿತಿ ಆಧರಿಸಿ ಪ್ರಸ್ತುತಪಡಿಸಬಹುದಾಗಿದೆ ಎಂದು ಅವರು ಹೇಳಿದರು.

ಎಲ್ಲ ಸರ್ಕಾರಿ ಕಚೇರಿಗಳು,ಶಾಲಾ–ಕಾಲೇಜುಗಳು, ವಿಶ್ವವಿದ್ಯಾಲಯಗಳು, ತಾಲ್ಲೂಕು ಕೇಂದ್ರಗಳು, ದೆಹಲಿ ಕನ್ನಡ ಸಂಘ, ಹೊರನಾಡು, ಗಡಿನಾಡ ಕನ್ನಡ ಸಂಘಗಳ ಕಚೇರಿ, ವಿಧಾನಸೌಧದ ಮೆಟ್ಟಿಲು ಹಾಗೂ ವಿಧಾನಸೌಧ– ವಿಕಾಸ ಸೌಧದ ಮಧ್ಯೆ ಇರುವ ಗಾಂಧಿ ಪ್ರತಿಮೆ ಎದುರು, ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಮೂಹ ಗಾಯನ ನಡೆಸುವರು ಎಂದು ತಿಳಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ, ಮೆಜೆಸ್ಟಿಕ್‌ ರೈಲು ನಿಲ್ದಾಣ, ಮೆಟ್ರೊ ನಿಲ್ದಾಣದಲ್ಲೂ ಈ ಐದು ಕನ್ನಡ ಗೀತೆಗಳನ್ನು ಹಾಡುವುದಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೇ, ನಾಡಿನ ಪ್ರಮುಖ ಪ್ರವಾಸಿ ಸ್ಥಳಗಳು, ಕೋಟೆಗಳು, ಕಡಲತೀರ, ಐಟಿ ಕಂಪನಿಗಳು, ಆಸ್ಪತ್ರೆ ಮತ್ತು ಜಿಲ್ಲಾ ಕೇಂದ್ರಗಳಲ್ಲೂ ಅಭಿಯಾನ ನಡೆಯಲಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT