ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ತೆರಿಗೆ(ಐ.ಟಿ) ಇಲಾಖೆ ಸಲ್ಲಿಸಿದ್ದ ಮೂರು ಕ್ರಿಮಿನಲ್ ಪರಿಷ್ಕರಣೆ ಅರ್ಜಿಗಳನ್ನು ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
2017ರ ಆಗಸ್ಟ್ನಲ್ಲಿ ಅವರ ಮನೆ ಮತ್ತು ಕಚೇರಿಗಳ ಮೇಲಿನ ದಾಳಿ ವೇಳೆ ಸಾಕ್ಷ್ಯನಾಶಕ್ಕೆ ಸಂಬಂಧಿಸಿದ ಮೂರು ಪ್ರಕರಣಗಳಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ರಿಲೀಫ್ ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಐ.ಟಿ ಇಲಾಖೆ, ಹೈಕೋರ್ಟ್ ಮೊರೆ ಹೋಗಿತ್ತು.
‘ವಿಶೇಷ ನ್ಯಾಯಾಲಯಗಳು ಹೊರಡಿಸಿರುವ ಆದೇಶಗಳಲ್ಲಿ ಯಾವುದೇ ಹಸ್ತಕ್ಷೇಪ ಅನಗತ್ಯ’ ಎಂದು ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ಪೀಠ ಅಭಿಪ್ರಾಯಪಟ್ಟಿತು.
ಬಿಡದಿ ಬಳಿಯ ರೆಸಾರ್ಟ್ಗೆ ದಾಳಿ ನಡೆಸಿದಾಗ ಡಿ.ಕೆ.ಶಿವಕುಮಾರ್ ಅವರು ತಮ್ಮ ಬಳಿ ಇದ್ದ ಚೀಟಿಯೊಂದನ್ನು ಹರಿದು ಹಾಕಿ ಸಾಕ್ಷ್ಯ ನಾಶ ಮಾಡಿದ್ದಾರೆ ಎಂದು ಐ.ಟಿ ಆರೋಪಿಸಿತ್ತು.