ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 106 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ಸೋಮವಾರ (ಆ. 24) ಪೂರ್ವಭಾವಿ ಪರೀಕ್ಷೆ ನಡೆಸಲಿದೆ.
ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಮತ್ತು ಅರ್ಜಿ ಸಲ್ಲಿಸಿದವರ ಪೈಕಿ ಶೇ 20ರಷ್ಟು ಮಂದಿ ಸರ್ಕಾರಿ ನೌಕರರಾಗಿದ್ದು, ಕೊರೊನಾ ಸೇನಾನಿಗಳಾಗಿ ಕೆಲಸ ಮಾಡುತ್ತಿರುವುದರಿಂದ ಪರೀಕ್ಷೆ ಮುಂದೂಡುವಂತೆ ಉದ್ಯೋಗಾಕಾಂಕ್ಷಿಗಳು ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಆಗ್ರಹಿಸಿದರೂ ಈ ಬೇಡಿಕೆಗೆ ಕೆಪಿಎಸ್ಸಿ ಮನ್ನಣೆ ನೀಡಿಲ್ಲ.
ಕೆಪಿಎಸ್ಸಿಯ ಪ್ರಾದೇಶಿಕ ಕಚೇರಿಗಳಿರುವ ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಮಾತ್ರ ಪರೀಕ್ಷಾ ಕೇಂದ್ರಗಳಿವೆ. ಇತರ ಜಿಲ್ಲೆಗಳ ಪರೀಕ್ಷಾರ್ಥಿಗಳು ಈ ಜಿಲ್ಲೆಗಳಿಗೆ ತೆರಳಿ ಪರೀಕ್ಷೆ ಬರೆಯಬೇಕಿದೆ.
‘ಅಭ್ಯರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಮತ್ತು ಸಾನಿಟೈಜೇಷನ್ ಮಾಡಬೇಕಾಗಿರುವುದರಿಂದ ಪರೀಕ್ಷೆ ಆರಂಭಕ್ಕೆ ಒಂದು ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಉಪ ಕೇಂದ್ರಗಳಿಗೆ ಹೋಗಬೇಕು. ಬೆಳಗ್ಗಿನ ಅವಧಿಯಲ್ಲಿ 9.30ರ ನಂತರ ಮತ್ತು ಮಧ್ಯಾಹ್ನದ ಅವಧಿಯಲ್ಲಿ 1.30ರ ನಂತರ ಪರೀಕ್ಷಾ ಕೇಂದ್ರಗಳಿಗೆ ಬಂದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ’ ಎಂದು ಕೆಪಿಎಸ್ಸಿ ತಿಳಿಸಿದೆ.
‘ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಮಾಸ್ಕ್ ಧರಿಸದವರಿಗೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಅನುಮತಿ ನೀಡುವುದಿಲ್ಲ. ಅಲ್ಲದೆ, ಅಂತರ ಕಾಯ್ದುಕೊಳ್ಳಬೇಕು’ ಎಂದೂ ಕೆಪಿಎಸ್ಸಿ ಸ್ಪಷ್ಟಪಡಿಸಿದೆ.