ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

KPTCL ನೇಮಕಾತಿ ಅಕ್ರಮ: ಸಚಿವ ಸುನಿಲ್ ಕುಮಾರ್ ಹೊಣೆ ಹೊರಬೇಕು –ಸಿದ್ದರಾಮಯ್ಯ

Last Updated 26 ಆಗಸ್ಟ್ 2022, 15:45 IST
ಅಕ್ಷರ ಗಾತ್ರ

ಬೆಂಗಳೂರು: ಕಿರಿಯ ಎಂಜಿನಿಯರ್‌ಗಳ ಹುದ್ದೆ ಭರ್ತಿಗೆ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ (ಕೆಪಿಟಿಸಿಎಲ್‌) ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ಹೊಣೆಯನ್ನು ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಹೊರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಇನ್ನೂ ಮುಗಿದಿಲ್ಲ. ಪ್ರಕರಣದಲ್ಲಿ ಭಾಗಿಯಾದ ಹಿರಿ ತಲೆಗಳನ್ನು ಇನ್ನೂ ಬಂಧಿಸಿಲ್ಲ. ಅಷ್ಟರಲ್ಲಾಗಲೇ ಕೆಪಿಟಿಸಿಎಲ್‌ ನೇಮಕಾತಿ ಅಕ್ರಮ ಹೊರಬಿದ್ದಿದೆ. ಎಂಜಿನಿಯರ್‌ಗಳ ನೇಮಕಾತಿ ಪರೀಕ್ಷೆಯಲ್ಲೂ ಲಕ್ಷಗಟ್ಟಲೆ ಹಣದ ಕೈ ಬದಲಾಗಿರುವುದು ಈ ಸರ್ಕಾರದ ಯೋಗ್ಯತೆಗೆ ಕನ್ನಡಿ ಹಿಡಿದಂತಿದೆ’ ಎಂದಿದ್ದಾರೆ.

ಕಿರಿಯ ಎಂಜಿನಿಯರ್‌ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದ ವರದಿ ಇನ್ನೂ ತಮ್ಮ ಕೈಸೇರಿಲ್ಲ ಎಂದು ಹೇಳಿ ತಪ್ಪಿಸಿಕೊಳ್ಳಲು ಸುನಿಲ್‌ ಕುಮಾರ್‌ ಯತ್ನಿಸುತ್ತಿದ್ದಾರೆ. ಅಕ್ರಮಕ್ಕೆ ಕಾರಣರಾದ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ. ಈ ಹಗರಣದ ಹೊಣೆಯನ್ನು ಸಚಿವರೇ ಹೊತ್ತುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಪ್ರಭಾವಿಗಳ ಬಂಧನ ಇನ್ನೂ ಆಗಿಲ್ಲ. ಬಂಧಿತರಾಗಿರುವ ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ ವಿರುದ್ಧ ಪೂರ್ಣ ಪ್ರಮಾಣದ ಆರೋಪಪಟ್ಟಿಯನ್ನೂ ಸಲ್ಲಿಸಿಲ್ಲ. ಈ ಹಗರಣದಲ್ಲಿ ಸಂಗ್ರಹವಾದ ಕೋಟಿ ಕೋಟಿ ಹಣ ಯಾವ ಸಚಿವರ ಜೇಬು ಸೇರಿದೆ ಎಂಬುದನ್ನೂ ಬಹಿರಂಗಪಡಿಸಿಲ್ಲ. ಮಾಹಿತಿ ಮುಚ್ಚಿಡುತ್ತಿರುವ ಸರ್ಕಾರದ ಉದ್ದೇಶ ಏನಿದೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT