ರಾಮನಗರ: ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಬೇಕು. ಪೊಲೀಸರು ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದರು.
ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಗರದಲ್ಲಿ ಶನಿವಾರ ನಡೆದ ಪ್ರತಿಭಟನಾ ಮೆರವಣಿಗೆ ವೇಳೆ ಅವರು ಪತ್ರಕರ್ತರ ಜೊತೆ ಮಾತನಾಡಿದರು.
‘ಶೇ 40ರಷ್ಟು ಕಮಿಷನ್ ಕೇಳಿದ್ದಕ್ಕೆ ಸಂತೋಷ್ ಪಾಟೀಲ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದೇ ದೂರಿನಲ್ಲಿ ದಾಖಲಾಗಿದೆ. ಹೀಗಾಗಿ, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯೇ ಪ್ರಕರಣ ದಾಖಲಾಗಬೇಕು’ ಎಂದು ಒತ್ತಾಯಿಸಿದರು.
‘ಮುಖ್ಯಮಂತ್ರಿ, ಗೃಹ ಸಚಿವರೇ ಈಶ್ವರಪ್ಪ ಏನು ತಪ್ಪು ಮಾಡಿಲ್ಲ ಎಂದು ಸರ್ಟಿಫಿಕೆಟ್ ಕೊಡುತ್ತಿದ್ದಾರೆ. ಹೀಗಿರುವಾಗ ನ್ಯಾಯ ಸಿಗುತ್ತದೆಯೇ’ ಎಂದು ಪ್ರಶ್ನಿಸಿದ ಡಿಕೆಶಿ, ಪ್ರಕರಣದ ವಿಚಾರಣೆಗೆ ಆಯೋಗ ನೇಮಿಸಬೇಕು. ಇಲ್ಲವೇ ಸಿಬಿಐಗೆ ಪ್ರಕರಣ ವಹಿಸಬೇಕು ಎಂದು ಒತ್ತಾಯಿಸಿದರು.
‘ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣದಲ್ಲಿ ಡಿಕೆಶಿ ಕೈವಾಡ ಇದೆ’ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಯಾರೋ ಮೆಂಟಲ್ ಕೇಸ್ಗೆ ನಾನು ಉತ್ತರ ಕೊಡುವುದಿಲ್ಲ’ ಎಂದರು.
‘ಕಾಂಗ್ರೆಸ್ನವರನ್ನು ಜೈಲಿಗೆ ಕಳಿಸಬೇಕು’ ಎಂಬ ನಳಿನ್ಕುಮಾರ್ ಕಟೀಲ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ‘ಅಮಿತ್ ಶಾ, ಯಡಿಯೂರಪ್ಪ ಎಲ್ಲರೂ ಜೈಲಿಗೆ ಹೋಗಿದ್ದಾರೆ ಅಲ್ವಾ? ನಾನೂ ಹೋಗ್ತೀನಿ ಬಿಡಿ. ಅಲ್ಲೂ ಚೆನ್ನಾಗಿ ಊಟ ಕೊಡುತ್ತಾರೆ’ ಎಂದು ಲೇವಡಿ ಮಾಡಿದರು.