ಕೆಎಸ್ಪಿಸಿಬಿ ಅಧ್ಯಕ್ಷರ ನೇಮಕ ಪ್ರಕ್ರಿಯೆ: ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಕೆಎಸ್ಪಿಸಿಬಿ) ಅಧ್ಯಕ್ಷರ ನೇಮಕ ಪ್ರಕ್ರಿಯೆ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಆಧರಿಸಿ, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲು ಹೈಕೋರ್ಟ್ ಆದೇಶಿಸಿದೆ.
ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಸಾರ್ವಜನಿಕ ಪ್ರಕಟಣೆಯನ್ನು ಪ್ರಶ್ನಿಸಿ, ಚಿಕ್ಕಬಳ್ಳಾಪುರದ ಸಾಮಾಜಿಕ ಕಾರ್ಯಕರ್ತ ಆರ್. ಆಂಜನೇಯರೆಡ್ಡಿ ಅರ್ಜಿ ಸಲ್ಲಿಸಿದ್ದಾರೆ.
‘ಅಧ್ಯಕ್ಷರ ನೇಮಕ ಸಂಬಂಧ 2020 ಜುಲೈ 21ರಂದು ಹೊರಡಿಸಿರುವ ಪ್ರಕಟಣೆಯಲ್ಲಿನ ಷರತ್ತುಗಳು ಜಲ ಕಾಯ್ದೆಯ ನಿಬಂಧನೆಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾಗಿವೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.
‘ಅನುಭವ, ಕಾನೂನಿನ ತಿಳಿವಳಿಕೆ ಹೊಂದಿರಬೇಕು ಎಂಬ ಎಂಜಿಕೆ ಮೆನನ್ ಸಮಿತಿಯ ಶಿಫಾರಸು ಇದ್ದರೂ, ಅಂತಹ ನಿಬಂಧನೆಗಳನ್ನು ಪ್ರಕಟಣೆಯಲ್ಲಿ ಸೇರಿಸಿಲ್ಲ. ಕನಿಷ್ಠ ಅನುಭವವನ್ನೂ ನಿರ್ದಿಷ್ಟಪಡಿಸಲಾಗಿಲ್ಲ. ಈ ಆಯ್ಕೆ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಸಂಬಂಧ ಬಾಕಿ ಇರುವ ಇತರೆ ಅರ್ಜಿಗಳನ್ನು ಈ ಪಿಐಎಲ್ನೊಂದಿಗೆ ಸಂಯೋಜಿಸುವಂತೆ ತಿಳಿಸಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.