ಬೆಂಗಳೂರು: ‘ಸಾರಿಗೆ ನೌಕರರ ಸಂಘಟನೆಗಳ ಪ್ರತಿನಿಧಿಗಳ ಜೊತೆ ಭಾನುವಾರ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಸಲಾಗುವುದು’ ಎಂದು ಉಪ ಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವಲಕ್ಷ್ಮಣ ಸವದಿ ಹೇಳಿದರು.
ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಶನಿವಾರ ರಾತ್ರಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಾಲ್ಕು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನು ಸಭೆಗೆ ಆಹ್ವಾನಿಸಲಾಗಿದೆ. ಸಭೆಗೆ ಬರಲು ಅವರು ಒಪ್ಪಿದ್ದಾರೆ’ ಎಂದರು.
‘ವಿಕಾಸಸೌಧದಲ್ಲಿರುವ ನನ್ನ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಭೆಯ ತೀರ್ಮಾನಗಳನ್ನು ಮುಖ್ಯಮಂತ್ರಿಗೆ ತಿಳಿಸಲಾಗುವುದು. ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಪ್ರಕಟಿಸಲಿದ್ದಾರೆ. ಆರ್ಥಿಕ ಇತಿಮತಿ ನೋಡಿಕೊಂಡು ನೌಕರರ ಬೇಡಿಕೆಗಳನ್ನು ಪರಿಹರಿಸುವ ಬಗ್ಗೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲಾಗುವುದು’ ಎಂದೂ ಸವದಿ ಹೇಳಿದರು.