ಬೆಂಗಳೂರು: ‘ಭೂ ಒಡೆತನ ಯೋಜನೆಯ ಅನುಷ್ಠಾನದಲ್ಲಿ ಅಕ್ರಮ ನಡೆಯುತ್ತಿದೆ ಎಂಬ ಆರೋಪಗಳ ಕುರಿತು ತನಿಖೆ ನಡೆಸಲಾಗುವುದು’ ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿ. ಮುನಿಕೃಷ್ಣ ತಿಳಿಸಿದ್ದಾರೆ.
‘ಪ್ರಜಾವಾಣಿ’ಯ ಭಾನುವಾರದ ಸಂಚಿಕೆಯಲ್ಲಿ ‘ಚೋಮನ ಕನಸು: ಚೋರರಿಗೆ ನನಸು’ ಶೀರ್ಷಿಕೆಯಡಿ ಪ್ರಕಟವಾದ ‘ಓಳನೋಟ’ ವಿಶೇಷ ವರದಿಗಳ ಕುರಿತು ಸೋಮವಾರ ಪ್ರತಿಕ್ರಿಯೆ ನೀಡಿರುವ ಅವರು, ‘ಬೆಳಗಾವಿ, ರಾಯಚೂರು ಸೇರಿದಂತೆ ಪತ್ರಿಕೆಯಲ್ಲಿ ಪ್ರಕಟವಾಗಿರುವ ಪ್ರಕರಣಗಳ ಕುರಿತು ತನಿಖೆ ನಡೆಸಲಾಗುವುದು’ ಎಂದು ಹೇಳಿದ್ದಾರೆ.
'ಭೂ ಒಡೆತನ ಯೋಜನೆಯ ಅನುಷ್ಠಾನದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಪಾರದರ್ಶಕ ವ್ಯವಸ್ಥೆ ತರಲಾಗುವುದು. ಮುಂದಿನ ಆರ್ಥಿಕ ವರ್ಷದಿಂದ ಯೋಜನೆಯ ಅನುಷ್ಠಾನದ ಹೊಣೆಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಿ ಸರ್ಕಾರ ಆದೇಶ ಹೊರಡಿಸಿದೆ. ನಿಗಮದ ಮೇಲುಸ್ತುವಾರಿಯಲ್ಲಿ ಜಿಲ್ಲಾಧಿಕಾರಿಗಳು ಯೋಜನೆ ಅನುಷ್ಠಾನಕ್ಕೆ ತರುತ್ತಾರೆ’ ಎಂದು ಮಾಹಿತಿ ನೀಡಿದ್ದಾರೆ.
‘ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಈವರೆಗೆ 41,297 ಮಹಿಳೆಯರಿಗೆ 5,388 ಎಕರೆ 37 ಗುಂಟೆ ಖುಷ್ಕಿ ಜಮೀನು ಮತ್ತು 14,136 ಎಕರೆ 18 ಗುಂಟೆ ನೀರಾವರಿ ಜಮೀನನ್ನು ಭೂ ಒಡೆತನ ಯೋಜನೆಯಡಿ ಹಂಚಿಕೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.