ಬೆಂಗಳೂರು: ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ರೋಹಿಣಿ ವಿರುದ್ಧ ಸಾಮಾಜಿಕ ಮಾಧ್ಯಮಗಳ ಮೂಲಕ ಕಿಡಿಕಾರಿದ್ದ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್, ಕರ್ತವ್ಯ ಲೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ. ಇದೀಗ ಈ ಆರೋಪಗಳಿಗೆ ರೋಹಿಣಿ ಸಿಂಧೂರಿ ಅವರೂ ಪ್ರತಿಕ್ರಿಯಿಸಿದ್ದಾರೆ.
ಈ ಬೆಳವಣಿಗೆಯ ನಡುವೆಯೇ ಐಎಎಸ್ ಅಧಿಕಾರಿ ದಿವಂಗತ ಡಿ.ಕೆ. ರವಿ ಅವರ ಪತ್ನಿ ಕುಸುಮಾ ಅವರು ಪ್ರತಿಕ್ರಿಯಿಸಿದ್ದಾರೆ. 'ತಕ್ಷಣವೇ ಆಗಬಹುದು ಅಥವಾ ನಿಧಾನವಾಗಿ. ಆದರೆ, ಖಂಡಿತವಾಗಿಯೂ ಕರ್ಮ ನಿಮ್ಮನ್ನು ಹಿಂಬಾಲಿಸುತ್ತದೆ' ಎಂದು ಟ್ವೀಟ್ ಮಾಡಿದ್ದಾರೆ. ಆದರೆ, ಅವರು ಯಾರ ಹೆಸರನ್ನೂ ಉಲ್ಲೇಖಿಸಿಲ್ಲ.
ಐಎಎಸ್ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರು 2015ರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಆ ಪ್ರಕರಣದಲ್ಲಿ ಸಿಂಧೂರಿ ಅವರ ಹೆಸರು ಕೇಳಿ ಬಂದಿತ್ತು. ಹೀಗಾಗಿ, ಕುಸುಮಾ ಅವರು ರೋಹಿಣಿ ಅವರನ್ನು ಉದ್ದೇಶಿಸಿ ಈ ಟ್ವೀಟ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕುಸುಮಾ ಟ್ವೀಟ್ ಅನ್ನು ಹಂಚಿಕೊಂಡಿರುವ ರೂಪ, 'ಕುಸುಮಾ, ಒಬ್ಬ ಮಹಿಳೆಯಾಗಿ ನಾನು ನಿಮ್ಮ ನೋವನ್ನು ಅರ್ಥಮಾಡಿಕೊಳ್ಳಬಲ್ಲೆ. ಈ ನೋವು ಹಲವು ಮಹಿಳೆಯರದ್ದೂ ಆಗಿದೆ (ಕೆಲವರು ಐಎಎಸ್ನಲ್ಲೂ ಇದ್ದಾರೆ). ಆದರೂ ಅಸಹಯಕಳಾಗಿದ್ದೇನೆ. ಒಂದಲ್ಲ ಒಂದು ದಿನ ಅಪರಾಧಿಯ ವಿರುದ್ಧ (ಅದು ಮಹಿಳೆಯಾಗಿದ್ದರೂ) ಈ ವಿಚಾರದಲ್ಲಿ ನಿಮ್ಮ ಜೊತೆ ಕೆಲವರು ನಿಲ್ಲುತ್ತಾರೆ. 'ಆಕೆ' ಇಂತಹ ಕೆಲಸವನ್ನು ಪುನಃ ಮಾಡದಂತೆ ದೇವರು ಸದ್ಬುದ್ದಿ ನೀಡಲಿ' ಎಂದು ಬರೆದುಕೊಂಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.