ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಯಪಡೆ ಅಂತಿಮ ವರದಿ ನೀಡಿದ ತಕ್ಷಣ ನೀತಿ ಜಾರಿ: ಡಾ. ಸಿ.ಎನ್‌. ಅಶ್ವತ್ಥನಾರಾಯಣ

ಶಿಕ್ಷಣ ನೀತಿ ಜಾರಿಗೆ ಕಾನೂನು, ಆಡಳಿತಾತ್ಮಕ ಸಿದ್ಧತೆ– ಉಪ ಮುಖ್ಯಮಂತ್ರಿ
Last Updated 29 ಆಗಸ್ಟ್ 2020, 10:02 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲು ಆಡಳಿತಾತ್ಮಕ ಹಾಗೂ ಕಾನೂನಾತ್ಮಕ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದಷ್ಟು ಶೀಘ್ರ ನೀತಿ ಜಾರಿಗೆ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ಅಸೋಚಂ ಶನಿವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಿಂದ ಉನ್ನತ ಶಿಕ್ಷಣದಲ್ಲಿ ಆಗುವ ಬದಲಾವಣೆ ಮತ್ತು ಬೀರುವ ಪ್ರಭಾವ’ದ ಕುರಿತ ಸಂವಾದದಲ್ಲಿ ವರ್ಚುವಲ್ ವೇದಿಕೆ ಮೂಲಕ ಮಾತನಾಡಿದ ಅವರು, ‘ನೀತಿಯಲ್ಲಿರುವ ಅಂಶಗಳನ್ನು ಈಗಾಗಲೇ ಕೂಲಂಕಷವಾಗಿ ವಿಶ್ಲೇಷಣೆ ಮಾಡಲಾಗಿದೆ. ಅದಕ್ಕಾಗಿ ಉನ್ನತ ಮಟ್ಟದ ಕಾರ್ಯಪಡೆ ರಚಿಸಲಾಗಿದೆ. ಕಾರ್ಯಪಡೆಯ ಜತೆ ಹಲವು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಈ ಕಾರ್ಯಪಡೆಯ ಉಪ ಸಮಿತಿಗಳು ನೀಡಿರುವ ವರದಿಗಳನ್ನೂ ಅಧ್ಯಯನ ಮಾಡಲಾಗಿದೆ. ನೀತಿಯ ಜಾರಿಗೆ ಕಾರ್ಯಪಡೆ ಶೀಘ್ರದಲ್ಲೇ ಅಂತಿಮ ವರದಿ ನೀಡಲಿದ್ದು, ಅದು ಕೈ ಸೇರಿದ ತಕ್ಷಣ ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಹೆಜ್ಜೆ ಇಡಲಿದೆ’ ಎಂದರು.

‘ಒಮ್ಮೆ ಶಿಕ್ಷಣ ನೀತಿಯನ್ನು ಜಾರಿ ಮಾಡಿದರೆ ರಾಜ್ಯದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಗುರುತರ ಬದಲಾವಣೆಗಳು ಗೋಚರವಾಗುತ್ತವೆ. ರಾಜ್ಯದ ಉನ್ನತ ಶಿಕ್ಷಣದ ದಿಕ್ಕನ್ನೇ ಬದಲಿಸುವಂಥ ಅಂಶಗಳು ಈ ನೀತಿಯಲ್ಲಿವೆ’ ಎಂದರು.

‘ರಾಜ್ಯಕ್ಕೆ ಸೇರಿದ ತಜ್ಞರೇ ಇದ್ದ ಸಮಿತಿಯು ಅನೇಕ ಕ್ರಾಂತಿಕಾರಕ ಅಂಶಗಳನ್ನು ನೀತಿಯಲ್ಲಿ ಸೇರಿಸಿದೆ. ಎಲ್ಲ ಹಂತಗಳ ಶಿಕ್ಷಣದಲ್ಲೂ ಉತ್ತಮ ಸ್ಥಿತಿಯಲ್ಲಿರುವ ರಾಜ್ಯದಲ್ಲಿ ಮುಂದೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದ ಹಂತದವರೆಗೂ ಅಪಾರ ಬದಲಾವಣೆಗಳನ್ನು ಕಾಣಬಹುದು. ಈ ಮೂಲಕ, ಭಾರತವು ಜಗತ್ತಿನ ಜ್ಞಾನ ಕಣಜವಾಗಿ ಹೊರಹೊಮ್ಮಲಿದೆ. ಕರ್ನಾಟಕವೂ ಶಿಕ್ಷಣ ನೆಲೆಯಾಗಲಿದೆ ಎಂಬ ವಿಶ್ವಾಸವಿದೆ’ ಎಂದು ಹೇಳಿದರು.

ಉನ್ನತ ಶಿಕ್ಷಣ ಅಕಾಡೆಮಿ: ‘ರಾಜ್ಯದ ಜಿಲ್ಲೆಗಳಿಗೆ ಹೋಲಿಸಿದರೆ, ಪ್ರತಿ ಜಿಲ್ಲೆಗೆ ಎರಡು ವಿಶ್ವವಿದ್ಯಾಲಯಗಳಿವೆ. ಬೆಂಗಳೂರು ನಗರ ಒಂದರಲ್ಲೇ 880ಕ್ಕೂ ಹೆಚ್ಚು ಕಾಲೇಜುಗಳಿವೆ. ಹೀಗಾಗಿ, ಶಿಕ್ಷಣದ ರಾಜಧಾನಿಯಾಗಿ ಹೊರಹೊಮ್ಮುವ ಎಲ್ಲ ಶಕ್ತಿಯೂ ಈ ನಗರಕ್ಕಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಂತರ ಈ ಗುರಿಗೆ ಮತ್ತಷ್ಟು ಶಕ್ತಿ ಬರಲಿದೆ’ ಎಂದು ಉಪ ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

‘ಇಡೀ ದೇಶದಲ್ಲೇ ಶಿಕ್ಷಣ ನೀತಿಯನ್ನು ಜಾರಿ ಮಾಡಿದ ಮೊದಲ ರಾಜ್ಯವಾಗಿ ಕರ್ನಾಟಕವು ಮುನ್ನಡೆಯಲ್ಲಿ ನಿಲ್ಲಲಿದೆ. ಈಗಾಗಲೇ ಸರ್ಕಾರ ಹಾಕಿಕೊಂಡಿರುವ ಯೋಜನೆಯಂತೆ, ತಜ್ಞರು ಕೊಟ್ಟಿರುವ ಸಲಹೆಯಂತೆ ಹಂತಹಂತವಾಗಿ ಅನುಷ್ಠಾನ ಮಾಡಲಾಗುವುದು. ಧಾರವಾಡದಲ್ಲಿ ₹ 100 ಕೋಟಿ ವೆಚ್ಚದಲ್ಲಿ ಸ್ಥಾಪಿಸಿರುವ ಉನ್ನತ ಶಿಕ್ಷಣ ಅಕಾಡೆಮಿ ಕೂಡ ಅನುಕೂಲವಾಗಲಿದೆ. ಇದರ ಜತೆಜತೆಯಲ್ಲೇ ಬಹು ಉದ್ದೇಶಿತ ಹಾಗೂ ಬಹುವಿಷಯಗಳನ್ನು ಬೋಧನೆ ಮಾಡುವ ವಿವಿಗಳನ್ನು ಕೂಡ ಸ್ಥಾಪನೆ ಮಾಡಲಾಗುವುದು’ ಎಂದರು.

ಸಂವಾದದಲ್ಲಿ ಅಸೋಚಂ ರಾಜ್ಯ ಘಟಕದ ಅಧ್ಯಕ್ಷ ಬಿ.ವಿ. ನಾಯ್ಡು, ಪ್ರಾದೇಶಿಕ ನಿರ್ದೇಶಕಿ ಉಮಾ ನಾಯರ್, ಎಐಸಿಟಿಇ ಅಧ್ಯಕ್ಷ ಪ್ರೊ. ಅನಿಲ್ ಸಹಸ್ರಬುದ್ಧೆ, ಬೆಂಗಳೂರಿನ ಐಐಐಟಿ-ಬಿ ನಿರ್ದೇಶಕ ಪ್ರೊ. ಎಸ್. ಸಡಗೋಪನ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT