ಶಾಸಕರ ಭವನದಲ್ಲಿ ಬುಧವಾರ ನಡೆದ ಸಂಘದ ಕಾರ್ಯಕಾರಿ ಮಂಡಳಿಯ ಸಭೆಯ ಬಳಿಕ ಈ ವಿಷಯ ತಿಳಿಸಿದ ರುಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ಶಿಕ್ಷಣ ಇಲಾಖೆಯ ಅಧಿಕಾರಿಗಳ ಭ್ರಷ್ಟಾಚಾರ ಕುರಿತು ಮೂರು ವರ್ಷಗಳಿಂದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಗಮನ ಸೆಳೆದಿದ್ದೇವೆ. ಶಿಕ್ಷಣ ಇಲಾಖೆಯ ಆಯುಕ್ತರಿಗೆ ಕೆಲವು ಸಾಕ್ಷ್ಯಗಳನ್ನು ಸಲ್ಲಿಸಿದರೂ, ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಂಡಿಲ್ಲ. ಬದಲಿಗೆ, ಹಲವು ಸುತ್ತೋಲೆ ಹೊರಡಿಸುವ ಮೂಲಕ ಶಿಕ್ಷಣ ಹಕ್ಕು ಕಾಯ್ದೆಯ ನಿಯಮಗಳಲ್ಲೇ ಗೊಂದಲ ಸೃಷ್ಟಿಸಲಾಗಿದೆ. ಭ್ರಷ್ಟಾಚಾರಿಗಳಿಗೆ ಹಣ ಮಾಡಲು ಅನುಕೂಲ ಮಾಡಿಕೊಡಲಾಗಿದೆ’ ಎಂದು ಆರೋಪಿಸಿದರು.