ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೀಸಲಾತಿಗೆ ಆಗ್ರಹಿಸಿ ಏ. 21ರಿಂದ ಅನಿರ್ದಿಷ್ಟಾವಧಿ ಧರಣಿ: ಮೃತ್ಯುಂಜಯ ಸ್ವಾಮೀಜಿ

ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಸೇರಿಸುವಂತೆ ಒತ್ತಾಯ
Last Updated 18 ಏಪ್ರಿಲ್ 2022, 6:50 IST
ಅಕ್ಷರ ಗಾತ್ರ

ಬೆಂಗಳೂರು:ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಇದೇ 21ರಿಂದ ಕೂಡಲ ಸಂಗಮದಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲ ಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ಪಂಚಮಸಾಲಿ ಮೀಸಲಾತಿ ಹಕ್ಕೊತ್ತಾಯ ಸಮಿತಿ ಮುಖಂಡರ ಜತೆ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಬಾರಿ ಗಡುವು ಕೊಟ್ಟರೂ ಸರ್ಕಾರ ಬೇಡಿಕೆ ಈಡೇರಿಸಿಲ್ಲ. ಸರ್ಕಾರದ ಮೇಲೆ ನಂಬಿಕೆ ಇಟ್ಟಿದ್ದೆವು. ಸರ್ಕಾರ ಕೊಟ್ಟ ಮಾತಿಗೆ ತಪ್ಪಿದೆ. ಆದ್ದರಿಂದ ಈಗ ಅನಿವಾರ್ಯವಾಗಿ ಹೋರಾಟ ಆರಂಭಿಸುತ್ತಿದ್ದೇವೆ ಎಂದರು.

ಪಂಚಮಸಾಲಿ, ಲಿಂಗಾಯತ ಗೌಡ, ಮಲಯಗೌಡ, ದೀಕ್ಷ ಲಿಂಗಾಯತರು ಸೇರಿ ಹೋರಾಟ ನಡೆಸಲಾಗುವುದು. ಮೊದಲು ಕೂಡಲ ಸಂಗಮದಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು. ಎರಡನೇ ಹಂತದಲ್ಲಿ ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸಲಾಗುವುದು. ಮೇ 21ರಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಲಾಗುವುದು. ಅದಕ್ಕೂ ಸರ್ಕಾರ ಮಣಿಯದಿದ್ದರೆ ಬೆಂಗಳೂರಿನಲ್ಲಿ ಬೃಹತ್‌ ಹೋರಾಟ ಆರಂಬಿಸಲಾಗುವುದು ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಭರವಸೆ ಇತ್ತು. ಆದರೆ, ನಂಬಿಕೆ ಹುಸಿಯಾಗಿದೆ. ಜನರಲ್ಲಿ ಅಸಮಾಧಾನ ಉಂಟಾಗಿದೆ. ಆದ್ದರಿಂದಲೇ ಐದು ಹಂತದ ಹೋರಾಟ ಆರಂಭಿಸಲಾಗುತ್ತಿದೆ. ಹಿಂದುಳಿದ ವರ್ಗಗಳ ಪ್ರವರ್ಗ 2-ಎ ಪಟ್ಟಿಗೆ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಸೇರಿಸುವ ಆದೇಶ ಹೊರಬೀಳುವವರೆಗೆ ವಿರಮಿಸುವುದಿಲ್ಲ ಎಂದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ವರದಿ ಪಡೆದು ಪ್ರವರ್ಗ 2-ಎ ಅಡಿಯಲ್ಲಿ ಮೀಸಲಾತಿ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದರು. ಆಯೋಗದಿಂದ ವರದಿ ಪಡೆಯಲು ಒಂದು ವರ್ಷ ಬೇಕಿದೆಯೆ? ಕೋವಿಡ್‌ ಮತ್ತಿತರ ಕಾರಣಗಳನ್ನು ನೀಡುತ್ತಾ ಕಾಲಹರಣ ಮಾಡಲಾಗುತ್ತಿದೆ. ಈ ನಿಲುವು ವಿರೋಧಿಸಿ ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.

ಒಬ್ಬರು ಮಾತ್ರ ದೂರ: ಪಂಚಮಸಾಲಿ ಸಮುದಾಯದ ಶಾಸಕರು, ಸಚಿವರು ಮತ್ತು ಸಂಸದರ ಪೈಕಿ ಒಬ್ಬರು ಮಾತ್ರ ಈ ಹೋರಾಟದಿಂದ ದೂರ ಇದ್ದಾರೆ. ಅವರಿಗೆ ಯಾವ ಅಡ್ಡಿ ಇದೆಯೋ ಗೊತ್ತಿಲ್ಲ. ಉಳಿದ ಎಲ್ಲರೂ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ. ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಟ್ಟಿಯಾಗಿ ಬೆಂಬಲಕ್ಕೆ ನಿಂತಿದ್ದಾರೆ. ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಕೂಡ ಬೆಂಬಲಿಸುತ್ತಿದ್ದಾರೆ ಎಂದು ಸ್ವಾಮೀಜಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT