ನವದೆಹಲಿ: ‘ಕರ್ನಾಟಕದಲ್ಲಿ2022-23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ₹24 ಸಾವಿರ ಕೋಟಿ ಕೃಷಿ ಸಾಲ ವಿತರಿಸುವ ಗುರಿ ಇದೆ. ಅದರಲ್ಲಿ 3 ಲಕ್ಷ ಹೊಸ ರೈತರಿಗೆ ಸಾಲ ನೀಡುವ ಗುರಿ ಹೊಂದಲಾಗಿದೆ’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಇಲ್ಲಿ ಗುರುವಾರ ನಡೆದ ರಾಜ್ಯ ಸಹಕಾರ ಸಚಿವರ ಸಮ್ಮೇಳನದಲ್ಲಿ ಅವರು ಮಾತನಾಡಿ,‘ಕೇಂದ್ರ ಪ್ರಾಯೋಜಿತ ಯೋಜನೆಯಡಿ ₹228 ಕೋಟಿ ವೆಚ್ಚದಲ್ಲಿ 5,852 ಕೃಷಿ ಪತ್ತಿನ ಸಹಕಾರಿ ಸಂಘಗಳನ್ನು ಕಂಪ್ಯೂಟರೀಕರಣ ಮಾಡಲಾಗುತ್ತಿದೆ’ ಎಂದರು.
‘ಸಹಕಾರ ಸಂಘಗಳ ಸದಸ್ಯರು ಮತ್ತು ಕುಟುಂಬದವರಿಗೆ ವೈದ್ಯಕೀಯ ಸೌಲಭ್ಯ ಒದಗಿಸಲು ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮರು ಆರಂಭಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿ ಕರ್ನಾಟಕ ಸರ್ಕಾರ ₹300 ಕೋಟಿ ಮೀಸಲಿ ರಿಸಿದೆ’ ಎಂದು ಅವರು ಹೇಳಿದರು.
ರಾಜ್ಯದ 16 ಹಾಲು ಒಕ್ಕೂಟಗಳು ಪ್ರತಿದಿನ 85 ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿದೆ. ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ 100 ಕ್ಕೂ ಹೆಚ್ಚು ವಿವಿಧ ಹಾಲಿನ ಉತ್ಪನ್ನಗಳು ಜನಪ್ರಿಯವಾಗಿವೆ ಎಂದರು.