ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಸೇನಾನಿಗಳಿಗೆ ಸಿಗದ ಪರಿಹಾರ: ಲೋಕಾಯುಕ್ತ ನೋಟಿಸ್

ಪ್ರಜಾವಾಣಿ ವರದಿ ಪರಿಣಾಮ: ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ನ್ಯಾ. ವಿಶ್ವನಾಥ ಶೆಟ್ಟಿ
Last Updated 15 ಫೆಬ್ರುವರಿ 2021, 19:33 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ನಿಯಂತ್ರಣ ಕರ್ತವ್ಯದಲ್ಲಿ ಭಾಗಿಯಾಗಿ ಮೃತಪಟ್ಟ ಕೋವಿಡ್ ಸೇನಾನಿಗಳ ಕುಟುಂಬಗಳಿಗೆ ವಿಮಾ ಪರಿಹಾರ ಪಾವತಿಯಾಗದ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ ನ್ಯಾಯಮೂರ್ತಿ, ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿದ್ದಾರೆ.

‘ಸೇನಾನಿಗಳ ಕುಟುಂಬ ಅನಾಥ’ ಎಂಬ ಶೀರ್ಷಿಕೆಯಡಿ ಫೆ.11ರಂದು ‘ಪ್ರಜಾವಾಣಿ’ ಪ್ರಕಟಿಸಿದ ವರದಿ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥಶೆಟ್ಟಿ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಬಿಬಿಎಂಪಿ ಆಯುಕ್ತರು ಸೇರಿ 11 ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಆದೇಶಿಸಿದ್ದಾರೆ.

‘ಮೃತಪಟ್ಟ ಕೋವಿಡ್ ಸೇನಾನಿ ಕುಟುಂಬದವರು ಊಟಕ್ಕೂ ತೊಂದರೆ ಅನುಭವಿಸುತ್ತಿದ್ದಾರೆ ಎಂಬುದನ್ನು ‘ಪ್ರಜಾವಾಣಿ’ ವರದಿ ವಿವರಿಸಿದೆ. ಅವರ ಕುಟುಂಬ ಸದಸ್ಯರ ಅಹವಾಲುಗಳನ್ನು ಆಲಿಸಬೇಕು. ಕೂಡಲೇ ಸಮಸ್ಯೆ ಸರಿಪಡಿಸಬೇಕು. ಈ ಸಂಬಂಧ ಮೂರು ವಾರದೊಳಗೆ ವರದಿ ಸಲ್ಲಿಸಬೇಕು’ ಎಂದು ಅವರು ನಿರ್ದೇಶನ ನೀಡಿದ್ದಾರೆ.

‘ಆರೋಗ್ಯ ಕಾರ್ಯಕರ್ತರು, ಪೊಲೀಸ್, ನಗರ ಸ್ಥಳೀಯ ಸಂಸ್ಥೆಗಳ ನೌಕರರು, ಆಶಾ ಕಾರ್ಯಕರ್ತೆ ಸೇರಿಕರ್ತವ್ಯ ನಿರ್ವಹಣೆ ವೇಳೆ ಕೋವಿಡ್ ತಗುಲಿ ಮೃತಪಟ್ಟರು ಎಷ್ಟು ಎಂಬ ವಿವರ ಸಲ್ಲಿಸಬೇಕು. ಎಷ್ಟು ಕುಟುಂಬಗಳಿಗೆ ₹30 ಲಕ್ಷ ವಿಮಾ ಪರಿಹಾರ ನೀಡಲಾಗಿದೆ, ಇನ್ನೂ ಎಷ್ಟು ಮಂದಿಗೆ ಪರಿಹಾರ ನೀಡುವುದು ಬಾಕಿ ಇದೆ, ಅದಕ್ಕೆ ಕಾರಣಗಳೇನು ಎಂಬುದರ ಮಾಹಿತಿ ಒದಗಿಸಬೇಕು’ ಎಂದು ಸೂಚಿಸಿದ್ದಾರೆ.

‘ಕೋವಿಡ್‌ ನಿಯಂತ್ರಣಕ್ಕೆ ಮುಂದೆ ನಿಂತು ಪ್ರಾಣ ಕಳೆದುಕೊಂಡವರ ಕುಟುಂಬದವರ ರಕ್ಷಣೆಯ ಜವಾಬ್ದಾರಿ ಸರ್ಕಾರದ್ದೆ ಆಗಿದೆ. ಅವರು ಯಾವುದೇ ಕಾರಣಕ್ಕೂ ತೊಂದರೆಗೆ ಸಿಲುಕದಂತೆ ನೋಡಿಕೊಳ್ಳಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್‌ ಆದೇಶವೂ ಇದೆ’ ಎಂದು ಅವರು ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕೋವಿಡ್ ತಡೆಯಲು ಮುಂದಿನ ಸಾಲಿನಲ್ಲಿ ನಿಂತುಕೆಲಸ ಮಾಡಿರುವರ ಕುಟುಂಬಗಳನ್ನು ಅಲೆದಾಡಿಸದೆ ಕೂಡಲೇ ವಿಮಾ ಪರಿಹಾರ ಪಾವತಿಸಬೇಕು ಎಂದು ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT