ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ 2020 ಮತ್ತು 2021ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗಳನ್ನು ಪ್ರಕಟಿಸಿದೆ.
ಕೋವಿಡ್- 19 ಕಾರಣಕ್ಕೆ ಕಳೆದ ವರ್ಷದ ಪ್ರಶಸ್ತಿಯನ್ನು ಸರ್ಕಾರ ಪ್ರಕಟಿಸಿರಲಿಲ್ಲ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅಶೋಕ್ ಬಂಗಾರೆಪ್ಪಾ ಹಿಂಚಿಗೇರಿ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು.
ಆಯ್ಕೆ ಸಮಿತಿಯು 2020ರ ಸಾಲಿಗೆ ಬಾಗಲಕೋಟೆ ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರರಾದ ಮೀರಾಬಾಯಿ ಕೊಪ್ಪಿಕರ್ ಮತ್ತು 2021 ನೇ ಸಾಲಿಗೆ ಸಿದ್ಧಗಂಗಾ ಶಿಕ್ಷಣ ಸಂಸ್ಥೆ ಹಾಗೂ ಶ್ರೀ ಸಿದ್ಧಗಂಗಾ ಮಠವನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಅಕ್ಟೋಬರ್ 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಿಗೆ ತಲಾ ₹5 ಲಕ್ಷ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.